Select Your Language

Notifications

webdunia
webdunia
webdunia
webdunia

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎಲ್ಲ ಸಿದ್ಧತೆ: ಸಚಿವ ಸುರೇಶ್ ಕುಮಾರ್

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎಲ್ಲ ಸಿದ್ಧತೆ: ಸಚಿವ ಸುರೇಶ್ ಕುಮಾರ್
bangalore , ಮಂಗಳವಾರ, 6 ಜುಲೈ 2021 (19:39 IST)
ಬೆಂಗಳೂರು: ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಲಸಿಕೆ ಪಡೆಯುವುದರೊಂದಿಗೆ ಪರೀಕ್ಷೆ ಸುರಕ್ಷಿತ ವಾತಾವರಣದಲ್ಲಿ ಅಚ್ಚುಕಟ್ಟಾಗಿ ನಡೆಯಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಈ ಕುರಿತಂತೆ ಮಕ್ಕಳು ಮತ್ತು ಪೋಷಕರಲ್ಲಿ ಆತ್ಮ ವಿಶ್ವಾಸ ಮೂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. 
 
ಮಂಗಳವಾರ ಜಿಲ್ಲಾ ಶೈಕ್ಷಣಿಕ ಉಪನಿರ್ದೇಶಕರು ಮತ್ತು ಬಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆ ಕುರಿತು ಪರಿಶೀಲನೆ ನಡೆಸಿ ಮಾರ್ಗದರ್ಶನ ನೀಡಿದ ನಂತರ ಮಾತನಾಡಿದ ಅವರು, ಹೊಸ ರೀತಿಯಲ್ಲಿ ನಡೆಯುತ್ತಿರುವ ಪರೀಕ್ಷೆಗಳನ್ನು ಬರೆಯುವ ಕುರಿತು ಮಕ್ಕಳ ಮನಃಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡು, ಕಳೆದ ಬಾರಿಯಂತೆ ಎಲ್ಲ ಅಧಿಕಾರಿಗಳು ಮತ್ತು ಶಿಕ್ಷಕರು ಈ ಬಾರಿಯೂ ಪರೀಕ್ಷೆಯ ಯಶಸ್ಸಿಗೆ ಸಹಕರಿಸಿ ಮಕ್ಕಳ ಹಿತಕ್ಕಾಗಿ ಶ್ರಮಿಸಬೇಕೆಂದು ಸೂಚನೆ ನೀಡಿದರು. 
 
ರಾಜ್ಯದಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ ತೀವ್ರವಾಗಿ ಇಳಿಮುಖ ಕಾಣುತ್ತಿರುವುದು ಪೋಷಕರು ಮತ್ತು ಮಕ್ಕಳಲ್ಲಿ ಸಂತಸದ ಭಾವನೆ ಮೂಡಿಸಿದ್ದು ಪರೀಕ್ಷೆಗೆ ಮಕ್ಕಳನ್ನು ಧೈರ್ಯವಾಗಿ ಕಳಿಸಲು ಪೋಷಕರು ಉತ್ಸುಕವಾಗಿರುವುದು ಕಂಡು ಬಂದಿದೆ ಎಂದು ಸಚಿವರು ಹೇಳಿದರು. 
 
ಶೇಕಡಾ 95 ಕ್ಕಿಂತ ಹೆಚ್ಚು ಸಂಖ್ಯೆಯ ಪರೀಕ್ಷಾ ಸಿಬ್ಬಂದಿ ಲಸಿಕೆಯನ್ನು ಈಗಾಗಲೇ ಪಡೆದುಕೊಂಡಿರುವುದು ಅತ್ಯಂತ ಭರವಸೆ ತಂದಿರುವ ಸಂಗತಿ. ಇನ್ನುಳಿದವರು ಇನ್ನೆರಡು ದಿನಗಳಲ್ಲಿ ಲಸಿಕೆ ಪಡೆಯಲಿದ್ದಾರೆ ಎಂದು ಡಿಡಿಪಿಐ ಗಳು ಅಂಕಿ - ಅಂಶ ಗಳ ಮೂಲಕ ತಿಳಿಸಿದ್ದಾರೆ. ಪರೀಕ್ಷೆಗಳ ಕುರಿತು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಲು ಆಯಾ ಹಂತದಲ್ಲಿ ಕೈಗೊಂಡ ಉಪಕ್ರಮಗಳನ್ನು ಆಲಿಸಿದ ಸಚಿವರು ಉತ್ತಮ ಕ್ರಮಗಳನ್ನು ಇತರೆ ಜಿಲ್ಲೆಗಳವರು ವಿನಿಮಯ ಮಾಡಿಕೊಳ್ಳಬೇಕೆಂದು ಸೂಚನೆ ನೀಡಿದರು. ಪರೀಕ್ಷೆ ಕುರಿತಂತೆ ಮಕ್ಕಳನ್ನು ನೇರವಾಗಿ ತಲುಪಿ ಆ ಕುರಿತು ಮಾರ್ಗದರ್ಶನ ನೀಡಲು ಮುಂದಾಗಬೇಕು. ಮಕ್ಕಳನ್ನು ಆಯಾ ಗ್ರಾಮಪಂಚಾಯ್ತಿ ಮಟ್ಟದ ಗ್ರಂಥಾಲಯಗಳಿಗೆ ಕರೆಸಿಕೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಲು ಕ್ರಮ ವಹಿಸಬೇಕು. ಇದನ್ನು ಆಯಾ ಬಿಇಒಗಳು ಬಿಆರ್‍ಸಿ/ ಸಿಆರ್‍ಸಿ ಮತ್ತು ಮುಖ್ಯ ಶಿಕ್ಷಕರ ಮೂಲಕ ಈ ಕ್ರಮಕ್ಕೆ ಮುಂದಾಗಬೇಕೆಂದು ಸುರೇಶ್ ಕುಮಾರ್ ಸಲಹೆ ನೀಡಿದರು.
 
ಯಾವುದೇ ಕಾರಣದಿಂದಲೂ ಯಾವುದೇ ಒಂದು ಮಗುವೂ ಸಹ ಪರೀಕ್ಷೆಯಿಂದ ವಂಚಿತವಾಗದಂತೆ ಕ್ರಮ ವಹಿಸುವುದೂ ಸೇರಿದಂತೆ ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರೂಪಿಸಿದ ಎಸ್‍ಒಪಿ ಅನುಷ್ಠಾನ ಕುರಿತು ಚರ್ಚಿಸಿ, ಅಗತ್ಯವಿರುವ ಮಕ್ಕಳಿಗೆ ಪರೀಕ್ಷಾ ಕೇಂದ್ರಕ್ಕೆ ಬರಲು ವಾಹನ ವ್ಯವಸ್ಥೆ ಮಾಡಲು ಸಚಿವರು ಸೂಚನೆ ನೀಡಿದರು. ಕಳೆದ ವರ್ಷ ಯಾವೊಬ್ಬ ವಿದ್ಯಾರ್ಥಿಯೂ ಪರೀಕ್ಷೆಯಿಂದ ವಂಚಿತವಾಗದೇ ಇರುವುದು ಮತ್ತು ಒಬ್ಬನೇ ಒಬ್ಬ ಕೊನೆಯ ಕುಗ್ರಾಮದ ವಿದ್ಯಾಥಿ೵ಯೊಬ್ಬನಿಗಾಗಿ ಒಂದು ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಿದ್ದನ್ನು ಅವರು ಸ್ಮರಿಸಿದರು. 
 
ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ನೀಡಿದ ಪ್ರಶ್ನೆ ಪತ್ರಿಕೆಗಳ ಒಎಂಆರ್ ಶೀಟ್ ಸೇರಿದಂತೆ ಆಯಾ ಜಿಲ್ಲೆಗಳಲ್ಲಿ ರೂಪಿಸಲಾದ ಮಾದರಿ ಪ್ರಶ್ನೆಪತ್ರಿಕೆಗಳಿಗೆ ಮಕ್ಕಳು ಉತ್ತರಿಸಿ ಪರೀಕ್ಷಾ ಪದ್ಧತಿ ಕುರಿತು ಆತ್ಮವಿಶ್ವಾಸ ಮೂಡಿಸಿಕೊಂಡಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಪರೀಕ್ಷಾ ಕೇಂದ್ರಗಳಲ್ಲಿ ಮತ್ತು ಆಯಾ ಶಾಲೆಗಳಲ್ಲಿ ಪರೀಕ್ಷೆ ನಡೆಸಿ ಮಾರ್ಗದರ್ಶನ ನೀಡಲಾಗಿದೆ. ಕೆಲ ಜಿಲ್ಲೆಗಳಲ್ಲಿ ಮಕ್ಕಳ ಮನೆಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಿ ಅವುಗಳನ್ನು ಪಡೆದುಕೊಂಡು ಮಾರ್ಗದರ್ಶನ ನೀಡಲಾಗಿದೆ. ವೆಬಿನಾರ್, ವಾಟ್ಸಪ್‍ಗಳ ಮೂಲಕ ಹಾಗೆಯೇ ಕೆಲವೆಡೆಗಳಲ್ಲಿ ಮಕ್ಕಳ ಪೋಷಕರ ಉಪಸ್ಥಿತಿಯಲ್ಲಿ ಪ್ರಶ್ನೆ ಪತ್ರಿಕೆ ಉತ್ತರಿಸಲು ಮಕ್ಕಳಿಗೆ ತಿಳಿಹೇಳಲಾಗಿದ್ದು, ಪರೀಕ್ಷೆ ಕುರಿತು ಮಕ್ಕಳು ಮತ್ತು ಪೋಷಕರಲ್ಲಿ ವಿಶ್ವಾಸ ಮೂಡುವಂತಹ ಕ್ರಮಗಳನ್ನೂ ಕೈಗೊಳ್ಳಲಾಗಿದೆ ಎಂದೂ ಸಚಿವರು ವಿವರಿಸಿದರು. 
 
ಈಗಾಗಲೇ ಆಯಾ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸಭೆ ನಡೆಸಿ ಪರೀಕ್ಷೆ ಸಿದ್ಧತೆ ಕುರಿತು ಚಚಿ೵ಸಿ ವಿವಿಧ ಇಲಾಖೆ ಅಧಿಕಾರಿಗಳ ಸಕ್ರಿಯ ಪಾಲ್ಗೊಳ್ಳುವಿಕೆ ಕುರಿತು ಸೂಚನೆ ನೀಡಿದ್ದಾರೆ. ಗ್ರಾಮ ಪಂಚಾಯತಿ, ಪುರಸಭೆ, ನಗರಸಭೆ, ಪಟ್ಟಣ ಪಂಚಾಯತ್ ಸೇರಿದಂತೆ ಆಯಾ ಸ್ಥಳೀಯ ಸಂಸ್ಥೆಗಳು ಪರೀಕ್ಷಾ ಕೇಂದ್ರದ ಸ್ಯಾನಿಟೈಸೇಷನ್ ಮಾಡುವ ಕುರಿತು ಸೂಚನೆಗಳನ್ನು ನೀಡಿದ್ದಾರೆ. ಸಾರಿಗೆ ವ್ಯವಸ್ಥೆಯ ಕೊರತೆಯಿರುವ ಮಕ್ಕಳನ್ನು ಕರೆತರಲು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಮಕ್ಕಳು ಪರೀಕ್ಷೆಗೆ ಬಹಳ ಮೊದಲೇ ಪರೀಕ್ಷಾ ಕೇಂದ್ರಕ್ಕೆ ಬರುತ್ತಿರುವುದರಿಂದ ಮಕ್ಕಳು ಕೇಂದ್ರದಿಂದ ಹೊರಡುವಾಗ ಅವರಿಗೆ ಲಘು ಉಪಹಾರದ ವ್ಯವಸ್ಥೆಯನ್ನೂ ಕೆಲ ಜಿಲ್ಲೆಗಳಲ್ಲಿ ಮಾಡಲಾಗಿದೆ. ಅದೇ ರೀತಿ ಉಳಿದ ಜಿಲ್ಲೆಗಳಲ್ಲಿ ಲಘು ಉಪಹಾರ, ಬಿಸ್ಕತ್ ಇಲ್ಲವೇ ನೀರಿನ ವ್ಯವಸ್ಥೆ ಹಾಗೆಯೇ ಮಾಸ್ಕ್, ಸ್ಯಾನಿಟೈಸರ್ ಒದಗಿಸಲು ಯಾವುದೇ ಸಂಘಸಂಸ್ಥೆಗಳು ಮುಂದೆಬಂದರೆ ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಸಚಿವರು ಸಲಹೆ ನೀಡಿದದರು. ಕೆಲ ಜಿಲ್ಲೆಗಳಲ್ಲಿ ಶಾಸಕರು, ಸಂಘ ಸಂಸ್ಥೆಗಳು ಉದಾರವಾಗಿ ಇಂತಹ ಕೊಡುಗೆಗಳಿಗೆ ಮುಂದೆ ಬಂದಿದ್ದು ಅವುಗಳನ್ನು ಪಡೆದುಕೊಳ್ಳಲಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು ಎಂದು ಸಚಿವರು ತಿಳಿಸಿದರು. 
 
ಜನಪ್ರತಿನಿಧಿಗಳ ಸಹಕಾರ: 
 
ಪರೀಕ್ಷೆ ಕುರಿತು ಕೆಲವೆಡೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಆಯಾ ಭಾಗದ ವಿಧಾನಸಭಾ ಸದಸ್ಯರು, ವಿಧಾನಪರಿಷತ್ತಿನ ಸದಸ್ಯರು ಅಧಿಕಾರಿಗಳ ಸಭೆ ನಡೆಸಿ ಪರೀಕ್ಷೆ ಯಶಸ್ಸಿಗೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಈಗಾಗಲೇ ಎರಡೆರಡು ಬಾರಿ ಸಭೆಗಳನ್ನು ನಡೆಸಿ ಸಿದ್ಧತೆ ಪರಿಶೀಲಿಸಿದ್ದಾರೆ. ಬ್ಲಾಕ್ ಮಟ್ಟದಲ್ಲಿ ಸಿಆರ್‍ಪಿ, ಬಿಆರ್‍ಪಿ ಹಂತದಲ್ಲಿ ಹಾಗೆಯೇ ಮುಖ್ಯೋಪಾಧ್ಯಾಯರು ಶಾಲಾ ಹಂತದಲ್ಲಿ ಪ್ರತಿಯೊಬ್ಬ ಮಕ್ಕಳನ್ನೂ ತಲುಪಿದ್ದು, ಪೋಷಕರು ಮತ್ತು ಮಕ್ಕಳೊಂದಿಗೆ ಪರೀಕ್ಷೆ, ಈ ವರ್ಷದ ಪರೀಕ್ಷಾ ಪದ್ಧತಿ ಕುರಿತು ಮತ್ತು ಪರೀಕ್ಷೆಯನ್ನು ಮಕ್ಕಳ ಮುಂದಿನ ವ್ಯಾಸಂಗದ ಆಯ್ಕೆಯ ಅನುಕೂಲಕ್ಕಾಗಿ ಮತ್ತು ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುತ್ತಿರುವ ಕುರಿತು ವಿವರಣೆ ನೀಡಿ ಆತ್ಮವಿಶ್ವಾಸ ತುಂಬಿದ್ದಾರೆ.
 
ಎಸ್ಸೆಸ್ಸೆಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವುದರಿಂದ ಪ್ರಮುಖವಾಗಿ ಪರೀಕ್ಷಾ ಪಾವಿತ್ರ್ಯತೆ ಕುರಿತು ಹೆಚ್ಚಿನ ಗಮನ ಹರಿಸಬೇಕು. ಯಾವುದೇ ಕಾರಣಕ್ಕಾಗಿಯೂ ಯಾವುದೇ ರೀತಿಯಲ್ಲೂ ಯಾವುದೇ ಪರೀಕ್ಷಾ ಕೇಂದ್ರಗಳು ಸಲ್ಲದ ಕಾರಣಕ್ಕಾಗಿ ಮಾಧ್ಯಮಗಳಿಗೆ ವಿಷಯವಸ್ತುವಾಗದಂತೆ ಎಚ್ಚರಿಕೆ ವಹಿಸಿ ಪರೀಕ್ಷೆಗಳನ್ನು ಯಶಸ್ವಿಗೊಳಿಸಬೇಕೆಂದು ಅವರು ಸಲಹೆ ನೀಡಿದರು. ಇಂತಹ ಕಾಲಘಟ್ಟದಲ್ಲಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗವಹಿಸುವುದು ಪರೀಕ್ಷಾರ್ಥಿಗಳಿಗಷ್ಟೇ ಅಲ್ಲ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಎಲ್ಲರಿಗೂ ಸಹ ನೆನಪಿನಲ್ಲುಳಿಯುವಂತಹ ಒಂದು ಅವಿಸ್ಮರಣೀಯ ಘಟನೆಯಾಗಲಿರುವುದರಿಂದ ಈ ಪರೀಕ್ಷೆಗೆ ಎಲ್ಲರೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. 
 
ಹೆಚ್ಚು ಮಳೆಯ ಜಿಲ್ಲೆಗಳಲ್ಲಿ ಸಾರಿಗೆ ವ್ಯವಸ್ಥೆ:
ಪರೀಕ್ಷೆ ಮಳೆಗಾಲದ ಸಮಯದಲ್ಲಿ ನಡೆಯುತ್ತಿರುವುದರಿಂದ ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮಕ್ಕಳು ಪರೀಕ್ಷೆಗೆ ಬಂದು ಹೋಗುವ ಕುರಿತು ಕೈಗೊಳ್ಳಲಾದ ಕ್ರಮಗಳನ್ನು ಆಲಿಸಿದರು. ಹಾಗೆಯೇ ದಕ್ಷಿಣ ಕನ್ನಡದಲ್ಲಿ ದೋಣಿಯಲ್ಲಿ ಬರಬೇಕಾದ ಮಕ್ಕಳ ಕುರಿತಂತೆ ಕೈಗೊಳ್ಳಲಾದ ಕ್ರಮದ ಕುರಿತು ಸಲಹೆ ನೀಡಿದರು. ಹೋಗಿ ಬರಲು ತೊಂದರೆಯಾಗುವಂತಹ ಕಡೆಗಳಲ್ಲಿ ವಿದ್ಯಾರ್ಥಿನಿಲಯಗಳಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಬೇಕೆಂದು ಕೆಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಸ್ಥಳೀಯ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿರುವುದನ್ನು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಯಾವೊಬ್ಬ ವಿದ್ಯಾರ್ಥಿಗೂ ಯಾವುದೇ ರೀತಿಯಲ್ಲೂ ತೊಂದರೆಯಾಗಬಾರದು. ಉತ್ತಮ ಮನಸ್ಥಿತಿಯಲ್ಲಿ ಹಾಜರಾಗಿ ಉತ್ತಮ ಮತ್ತು ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ಬರೆಯುಂತಹ ಪರಿಸರವಿರುವಂತೆ ಮತ್ತು ಮಳೆಯ ಇರುಚಲಿನಿಂದಲು ಪರೀಕ್ಷಾರ್ಥಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಸುರೇಶ್ ಕುಮಾರ್ ಸಲಹೆ ನೀಡಿದರು. 
 
ಪರೀಕ್ಷಾ ಸಿದ್ಧತೆ, ಸಿಬ್ಬಂದಿ ಲಸಿಕೆ ಪಡೆದಿರುವುದು, ಸ್ಥಳೀಯ ಹಂತದಲ್ಲಿ ಜಿಲ್ಲಾಧಕಾರಿಗಳ ನೇತೃತ್ವದ ಸಭೆಗಳ ಮಾಹಿತಿ, ಸ್ವಯಂ ಸೇವಕರ ನೇಮಕ, ಮಾಸ್ಕ್, ಸ್ಯಾನಿಟೈಜರ್ ವ್ಯವಸ್ಥೆ, ಎಸ್‍ಒಪಿ ಪಾಲನೆ ಕುರಿತು ಎಲ್ಲ 34 ಶೈಕ್ಷಣಿಕ ಜಿಲ್ಲೆಗಳ ಡಿಡಿಪಿಐಗಳಿಂದ ಸಚಿವರು ಮಾಹಿತಿ ಪಡೆದುಕೊಂಡರು. 
 
15-17ರಂದು ಅಣಕು ಪರೀಕ್ಷೆ:
ಪರೀಕ್ಷಾ ಸಿದ್ಧತೆ ಕುರಿತಂತೆ ವಿವರಣೆ ಪಡೆದ ಸುರೇಶ್ ಕುಮಾರ್, ಜುಲೈ 15 ಮತ್ತು 17ರಂದು ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಅಣಕು ಪರೀಕ್ಷೆಗಳನ್ನು ನಡೆಸುವುದಕ್ಕೆ ಸೂಚನೆ ನೀಡಿ, ಪರೀಕ್ಷಾ ಕೇಂದ್ರ ಪ್ರವೇಶದಿಂದ ಹಿಡಿದು ಪರೀಕ್ಷಾ ಕೊಠಡಿ ಪ್ರವೇಶ ಹಾಗೆಯೇ ಪರೀಕ್ಷೆ ನಂತರ ಮಕ್ಕಳು ಸಾಮಾಜಿಕ ಅಂತರದ ಮೂಲಕ ಪರೀಕ್ಷಾ ಕೇಂದ್ರದಿಂದ ಹೊರಬರುವ ತನಕ ಎಲ್ಲ ರೀತಿಯ ಕ್ರಮಗಳನ್ನು ಪಾಲಿಸುವಂತೆ ಸಚಿವರು ಸೂಚಿಸಿದರು. 
 
ಮಕ್ಕಳೊಂದಿಗೆ ಫೋನ್ ಇನ್ ಸಂವೇದನಾ: 
ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಭಾಗಿಯಾಗುತ್ತಿರುವ ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಪರೀಕ್ಷೆಗೆ ಮಕ್ಕಳು ಸಜ್ಜಾಗಿರುವ ಕುರಿತು ಮಕ್ಕಳೊಂದಿಗೆ ತಾವು ಮಾತನಾಡು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಲು ಜುಲೈ 9 ಮತ್ತು 14ರಂದು ಫೋನ್ ಇನ್ ಸಂವೇದನಾ ಕಾರ್ಯಕ್ರಮ ನಡೆಯಲಿದೆ. ಪ್ರತಿಯೊಂದು ಜಿಲ್ಲೆಗಳಿಂದ 2000ಕ್ಕೂ ಹೆಚ್ಚು ಮಕ್ಕಳು ಈ ಸಂವೇದನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆಂದು ಸುರೇಶ್ ಕುಮಾರ್ ತಿಳಿಸಿದರು. 
 
ಸಭೆಯಲ್ಲಿ ಸಾಶಿಇ ಆಯುಕ್ತ ವಿ. ಅನ್ಬುಕುಮಾರ್, ಅಪರ ಆಯುಕ್ತರಾದ ನಳಿನ್ ಅತುಲ್, ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಸೇರಿದಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. 
 
ಮಕ್ಕಳಿಗೆ ಚಂದನಾ ವಾಹಿನಿ ಪಾಠಗಳ ಲಭ್ಯತೆ: ಬಿಇಒಗಳಿಗೆ ಸೂಚನೆ
ಬೆಂಗಳೂರು: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಶಾಲೆಗಳು ಭೌತಿಕವಾಗಿ ಆರಂಭವಾಗದೇ ಇರುವುದರಿಂದ ದೂರದರ್ಶನ ಚಂದನಾ ವಾಹಿನಿಯಲ್ಲಿ ತರಗತಿಗಳು ಆರಂಭವಾಗಿದ್ದು, ಈ ತರಗತಿಗಳಿಗೆ ಮಕ್ಕಳು ಹಾಜರಾಗುವಂತೆ ಮಾಡಲು ಎಲ್ಲ ಕ್ರಮಗಳನ್ನೂ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 
 
ಮಂಗಳವಾರ ಡಿಡಿಪಿಐ ಮತ್ತು ಬಿಇಒಗಳೊಂದಿಗೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯದ ಶೇ. 31ರಷ್ಟು ಮಕ್ಕಳಿಗೆ ದೂರದಶ೵ನ ಸೌಲಭ್ಯವೂ ಇಲ್ಲದೇ ಇರುವುದರಿಂದ ಆ ಮಕ್ಕಳಿಗೆ ಅನುಕೂಲವಾಗುವಂತೆ ಸ್ಥಳೀಯ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ದೂರದರ್ಶನ ಸೌಲಭ್ಯ ಒದಗಿಸಿ ಅಂತಹ ಮಕ್ಕಳಿಗೆ ಚಂದನಾ ವಾಹಿನಿಯ ಪಾಠಗಳನ್ನು ತಲುಪುವಂತೆ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಿದರು. 
 
ಸ್ಮಾರ್ಟ್ ಫೋನ್‍ಗಳು ಮತ್ತು ದೂರದ‌ರ್ಶನ ವ್ಯವಸ್ಥೆಯೂ ಇಲ್ಲದ ಮಕ್ಕಳಿಗೆ ಸಂವೇದನಾ ತರಗತಿಗಳು ತಲುಪುವಂತೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸುರೇಶ್ ಕುಮಾರ್ ತಿಳಿಸಿದರು. 
 
ಶಾಲಾ ತರಗತಿಗಳು ಭೌತಿಕವಾಗಿ ಆರಂಭವಾಗುವುದು ಇನ್ನೂ ನಿಧಾ೵ರವಾಗಿಲ್ಲವಾದ್ದರಿಂದ ಮಕ್ಕಳ ಕಲಿಕಾ ನಿರಂತರತೆಗೆ ಕ್ರಮ ವಹಿಸಬೇಕಾದ್ದರಿಂದ ಪರ್ಯಾಯ ಬೋಧನೆಗೆ ನಾವು ಹೆಚ್ಚು ಸಕ್ರಿಯವಾಗಬೇಕಿರುವುದರಿಂದ ಇಲಾಖೆಯ ಅಧಿಕಾರಿಗಳು ಪರ್ಯಾಯ ಬೋಧನೆಗೆ ಸ್ಥಳೀಯವಾಗಿ ತಮ್ಮದೇ ಆದ ರೀತಿಯಲ್ಲಿ ಮಕ್ಕಳನ್ನು ತಲುಪಲು ಮತ್ತು ದೂರದರ್ಶನ ವಾಹಿನಿಯ ಪಾಠ ಬೋಧನೆಗಳು ಮಕ್ಕಳಿಗೆ ದೊರೆಯಲು ಕ್ರಮಗಳನ್ನು ಕೈಗೊಳ್ಳಬೇಕೆಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರು ಹಳೆ ವಿಮಾನ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಆಕ್ರಮವಾಗಿ ಪ್ರವೇಶ