Publish Date: Thu, 05 Dec 2024 (19:24 IST)
Updated Date: Thu, 05 Dec 2024 (19:27 IST)
ಬೆಂಗಳೂರು: ನಂದಿನಿ ಬ್ರ್ಯಾಂಡ್ ಅನ್ನು ಮಾರುಕಟ್ಟೆಗೆ ವಿಸ್ತರಿಸಲು ಅತ್ಯಂತ ಉತ್ಸಾಹ ಮತ್ತು ಬದ್ಧತೆ ತೋರಿದ್ದ ದಕ್ಷ ಅಧಿಕಾರಿ ಕೆಎಂಎಫ್ ಎಂಡಿ ಎಂಕೆ ಜಗದೀಶ್ ಅವರನ್ನು ವರ್ಗಾವಣೆ ಮಾಡಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರದ ಮೇಲೆ ಹಲವು ಅನುಮಾನಗಳಿವೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಅತ್ಯಂತ ಬೇಡಿಕೆ ಇರುವ ರೆಡಿ ಮೇಡ್ ಇಡ್ಲಿ, ದೋಸೆ ಹಿಟ್ಟು, ವೇ ಪ್ರೋಟೀನ್ ಸೇರಿದಂತೆ ಅನೇಕ ಹೊಸ ಉತ್ಪನ್ನಗಳ ಮೂಲಕ 'ನಂದಿನಿ' ಬ್ರ್ಯಾಂಡ್ ನ ಮಾರುಕಟ್ಟೆ ವಿಸ್ತರಿಸಲು ಅತ್ಯಂತ ಉತ್ಸಾಹ ಮತ್ತು ಬದ್ಧತೆ ತೋರಿದ್ದ ದಕ್ಷ ಅಧಿಕಾರಿ ಕೆಎಂಎಫ್ ಎಂಡಿ ಶ್ರೀ ಎಂ.ಕೆ.ಜಗದೀಶ್ ಅವರನ್ನ ದಿಢೀರನೆ ವರ್ಗಾವಣೆ ಮಾಡಿರುವ ಕಾಂಗ್ರೆಸ್
ಸರ್ಕಾರದ ನಿರ್ಧಾರ ಸಾರ್ವಜನಿಕರಲ್ಲಿ ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಈ ನಿರ್ಧಾರದ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳ ಕೈವಾಡವಿದೆಯಾ? ನಂದಿನಿ ಬ್ರ್ಯಾಂಡ್ ಹೆಸರಿನಲ್ಲಿ ಪರಿಚಯಿಸಲು ಹೊರಟಿದ್ದ ಹೊಸ ಉತ್ಪನ್ನಗಳು ಮಾರುಕಟ್ಟೆಗೆ ಬರದಂತೆ ಖಾಸಗಿ ಕಂಪನಿಗಳ ಲಾಭಿಗೆ ಸರ್ಕಾರ ಮಣಿದಿದೆಯಾ?
ಈ ಅನುಮಾನಗಳ ಕುರಿತಂತೆ ಮತ್ತು ನಂದಿನಿ ಬ್ರ್ಯಾಂಡ್ ನ ನೂತನ ಉತ್ಪನ್ನಗಳನ್ನು ಮಾರುಕಟ್ಟೆಗೆ ತರುವ ಯೋಜನೆಯಲ್ಲಿ ಏನಾದರೂ ಬದಲಾವಣೆ ಇದೆಯೇ ಎನ್ನುವ ಕುರಿತಂತೆ ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸುತ್ತೇನೆ.