ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಹಾಲಯ ಅಮವಾಸ್ಯೆ ದಿನದಂದೇ ಸುಪ್ರೀಂಕೋರ್ಟ್ ಕರ್ನಾಟಕದ ವಿರುದ್ಧ ತೀರ್ಪು ನೀಡಿರುವುದು ರಾಜ್ಯಕ್ಕೆ ಬ್ಲಾಕ್ ಡೇ ಆಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಜಲಾಶಯದಲ್ಲಿ 3 ಸಾವಿರ ಕ್ಯೂಸೆಕ್ ಮಾತ್ರ ಒಳಹರಿವಿದೆ. ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ ಸುಪೀಂಕೋರ್ಟ್ ತೀರ್ಪಿನಿಂದ ರಾಜ್ಯಕ್ಕೆ ಮತ್ತಷ್ಟು ಅನ್ಯಾಯವಾಗಿದೆ ಎಂದರು.
ವಿಶೇಷ ಅಧಿವೇಶನ ಕರೆದು ಎಲ್ಲರೂ ಒಮ್ಮತದ ನಿರ್ಣಯ ಕೈಗೊಂಡರು ಸುಪ್ರೀಂಕೋರ್ಟ್ ಅದಕ್ಕೆ ಬೆಲೆ ಕೊಟ್ಟಿಲ್ಲ. ರಾಜ್ಯದ ವಿರುದ್ಧ ತೀರ್ಪು ಬಂದಿರುವ ಹಿನ್ನೆಲೆಯಲ್ಲಿ ಯಾರು ಕಾನೂನೂ ಕೈಗೆತ್ತಿಗೊಳ್ಳುವ ಕೆಲಸಕ್ಕೆ ಮುಂದಾಗಬಾರದು ಎಂದು ಜನತೆಯಲ್ಲಿ ಮನವಿ ಮಾಡಿದರು.
ರಾಜ್ಯ ಸರಕಾರ ಜನತೆ ಪರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ಸರ್ವಪಕ್ಷ ಸಭೆ ಕರೆದಿದ್ದಾರೆ. ಸಭೆಯಲ್ಲಿ ಚರ್ಚಿಸಿ ಮುಂದಿನ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ