Publish Date: Tue, 23 Jul 2024 (15:36 IST)
Updated Date: Tue, 23 Jul 2024 (15:39 IST)
ಬೆಂಗಳೂರು: ಯುವಕನಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಬಂಧಿಯಾಗಿದ್ದ ಸೂರಜ್ ರೇವಣ್ಣಗೆ ನಿನ್ನೆ ಷರತ್ತು ಬದ್ಧ ಜಾಮೀನು ಸಿಕ್ಕ ಹಿನ್ನೆಲೆ ಇಂದು ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬಂಧನವಾಗಿ ಒಂದು ತಿಂಗಳ ಬಳಿಕ ಸೂರಜ್ ರೇವಣ್ಣ ಅವರು ಜೈಲಿಂದ ಹೊರಬಂದಿದ್ದಾರೆ.
ಇಂದು ಮಧ್ಯಾಹ್ನ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಸೂರಜ್ ರೇವಣ್ಣ ವಿರುದ್ಧ 2 ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು.
ಹೊಳೆನರಸೀಪುರ ಟೌನ್ನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮೊದಲಿಗೆ ಸೂರಜ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಿತ್ತು. ಬಳಿಕ ಸೋಮವಾರ ಎರಡನೇ ಪ್ರಕರಣದಲ್ಲೂ ನಿರೀಕ್ಷಣಾ ಜಾಮೀನು ಸಿಕ್ಕಿದೆ.
ಪ್ರಕರಣದ ಹಿನ್ನೆಲೆ: ಹೊಳೆನರಸೀಪುರದಲ್ಲಿ ಘನ್ನಿಗಡ ಫಾರ್ಮ್ ಹೌಸ್ಗೆ ಜೂನ್ 16ರಂದು ಕರೆಯಿಸಿಕೊಂಡು ಸೂರಜ್ ರೇವಣ್ಣ ತಮ್ಮ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಯುವಕ ಜೂನ್ 22ರಂದು ಸೂರಜ್ ಹಾಗೂ ಶಿವಕುಮಾರ್ ಎಂಬವರ ವಿರುದ್ಧ ದೂರು ನೀಡಿದ್ದರು. ಇದನ್ನು ಆಧರಿಸಿ ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸೂರಜ್ ಮತ್ತು ಶಿವಕುಮಾರ್ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿ ಎಫ್ಐಆರ್ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಸೂರಜ್ ಬಂಧನವಾಗಿದೆ.