Publish Date: Fri, 04 Aug 2023 (10:10 IST)
Updated Date: Fri, 04 Aug 2023 (00:25 IST)
ಬೆಂಗಳೂರು : ಕರ್ನಾಟಕದ ಸದನದಲ್ಲಿ ಬಹಳ ಕಡಿಮೆ ಬಾರಿ ಅಮಾನತುಗಳಾಗಿವೆ. ಮೊನ್ನೆ ದುರ್ಬೀನು ಹಾಕಿಕೊಂಡು ಹುಡುಕಿದರೆ ಸಿಗುವಷ್ಟು ಚಿಕ್ಕ ವಿಷಯಕ್ಕೆ 10 ಬಿಜೆಪಿ ಶಾಸಕರ ಅಮಾನತು ಘಟನೆ ನಡೆದಿದೆ.
ಇದು ಅಕ್ಷಮ್ಯ ಕ್ರಮ ಎಂದು ಎಂದು ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಭಿಪ್ರಾಯಪಟ್ಟರು. ಬೆಂಗಳೂರಿನ `ಸಿಟಿಜನ್ಸ್ ಫಾರ್ ಡೆಮಾಕ್ರೆಸಿ ವತಿಯಿಂದ ನಗರದ ಗಾಂಧಿ ಭವನದಲ್ಲಿ ಏರ್ಪಡಿಸಿದ್ದ “ಶಾಸಕರ ಅಮಾನತು ಒಂದು ಚರ್ಚೆ” ಕಾರ್ಯಕ್ರಮದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿದರು.
ಚಿಕ್ಕ ವಿಷಯವನ್ನೇ ದೊಡ್ಡ ವಿಷಯ ಮಾಡಿ ಸ್ಪೀಕರ್ ಮತ್ತು ಸರ್ಕಾರ ಶಾಸಕರನ್ನು ಅಮಾನತು ಮಾಡಿದ್ದು, ಅದು ಅಕ್ಷಮ್ಯ ಎಂದು ಅವರು ತಿಳಿಸಿದರು. ಇದರಲ್ಲಿ ಮುಖ್ಯಮಂತ್ರಿ, ಸಂಸದೀಯ ವ್ಯವಹಾರ ಸಚಿವರ ಪ್ರಮುಖ ಪಾತ್ರವೂ ಇದೆ. ಸದನದ ರಾಜಕೀಯ ದುರ್ಬಳಕೆಗೆ ಇದು ಸ್ಪಷ್ಟ ಉದಾಹರಣೆ ಎಂದು ತಿಳಿಸಿದರು.
ಸುಗಮ ಕಲಾಪ ನಡೆಯಲು ಆಡಳಿತ ಪಕ್ಷದ ಹೊಣೆಯೂ ಪ್ರಮುಖವಾದುದು. ದೇಶದಲ್ಲಿ ಕಾಂಗ್ರೆಸ್ ಪಕ್ಷ 50-60 ವರ್ಷ ಆಡಳಿತ ಮಾಡಿದೆ. ಪೇಪರ್ ಹರಿದು ಹಾಕಿದ ಚಿಕ್ಕ ಘಟನೆಗೆ ಅಮಾನತಿನ ಶಿಕ್ಷೆ ಕೊಡುವುದು ಸರಿಯಲ್ಲ. ಇದು ವ್ಯವಸ್ಥೆಗೆ ಹೊಡೆತ ನೀಡುತ್ತದೆ ಎಂದು ತಿಳಿಸಿದರು.