ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮೂಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾತ್ಕಾಲಿಕ ರಿಲೀಫ್ ದೊರಕಿದೆ.
ಸಿದ್ದರಾಮಯ್ಯ ಅವರ ವಿರುದ್ಧದ ಕೇಳಿಬಂದಿರುವ ಮುಡಾ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ನಡೆಯಿತು.
ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಕುರಿತ ಆದೇಶ ಸದ್ಯಕ್ಕಿಲ್ಲ. ತನಿಖೆ ಮುಂದುವರೆಸುವಂತೆ ಲೋಕಾಯುಕ್ತ ಪೊಲೀಸರಿಗೆ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ ಸೂಚನೆ ನೀಡಿದೆ.
ಜಾರಿ ನಿರ್ದೇಶನಾಲಯ ಕೂಡಾ ತಕರಾರು ಅರ್ಜಿ ಸಲ್ಲಿಸಬಹುದು. ಲೋಕಾಯುಕ್ತ ಪೊಲೀಸರ ಅಂತಿಮ ವರದಿ ಬಳಿಕವೇ ಬಿ ರಿಪೋರ್ಟ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಲೋಕಾಯುಕ್ತ ಪೊಲೀಸರು ತನಿಖೆ ಇನ್ನೂ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಲು ಸೂಚನೆ ನೀಡಲಾಗಿದೆ ಎಂದು ಕೋರ್ಟ್ ಮೇ 7 ಕ್ಕೆ ವಿಚಾರಣೆ ಮುಂದೂಡಿದೆ.