Publish Date: Sat, 18 Jun 2022 (16:56 IST)
Updated Date: Sat, 18 Jun 2022 (17:01 IST)
ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯು ಪರಿಷ್ಕರಿಸಿರುವ ಪಠ್ಯ ಪುಸ್ತಕ ರದ್ದು ಆಗ್ರಹಿಸಿ ಶನಿವಾರ ಪಾರ್ಕ್ ನಲ್ಲಿ ವಿವಿಧ ಸಂಘಟನೆಗಳು ಸರ್ಕಾರದ ವಿರುದ್ದ ಒಕ್ಕೊರಲಲ್ಲಿ ಅಗ್ರಹಿಸಿದವು.
ರಾಜ್ಯಾದ್ಯಂತ ವಿವಾದ ಭುಗಿಲೆದ್ದಿದು ಪರಿಷ್ಕೃತ ಪಠ್ಯವನ್ನ ಹಿಂಪಡೆಯುವಂತೆ ಆಗ್ರಹಿಸಿ ಶನಿವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ವಿವಿಧ ಸಂಘಟನೆಗಳು ಸರ್ಕಾರದ ವಿರುದ್ದ ಒಕ್ಕೊರಲ ಧ್ವನಿ ಮೊಳಗಿಸಿವೆ.
ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಜೆಡಿಎಸ್ ರಾಜ್ಯಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗು ಹಲವಾರು ಗಣ್ಯರು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಈ ಹೋರಾಟಕ್ಕೆ ನನ್ನ ಬೆಂಬಲ ಸಂಪೂರ್ಣವಾಗಿ ಇದೆ ಎಂದು ಹೇಳಿದ್ದಾರೆ. ಈ ಹೋರಾಟ ತಾರ್ಕಿಕ ಅಂತ್ಯಕ್ಕೆ ತಲುಪಬೇಕು ಸಮಿತಿಯವರು ಎಲ್ಲಿಗೆ ಕರೆದರು ನಾನು ಬರಲು ಸಿದ್ದನಿದ್ದೇನೆ ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ ನಾನು ಈ ಹೋರಾಟವನ್ನ ಸಂಪೂರ್ಣವಾಗಿ ಬೆಂಬಲಿಸುತ್ತೇನೆ ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿಯೊಂದು ಹಳ್ಳಿ ಹಳ್ಳಿಗು ಈ ಹೋರಾಟವನ್ನ ಕೊಂಡೊಯುತ್ತೇವೆ. ಪರಿಷ್ಕೃತ ಪಠ್ಯವನ್ನ ಈ ಕೂಡಲೇ ಹಿಂಪಡೆಯಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಅಧಿಕಾರ ಬಂದಾಗ ಈ ಪಠ್ಯಗಳನ್ನು ಕಿತ್ತು ಎಸೆಯಬೇಕಾಗುತ್ತದೆ ಎಂದು ಪರಿಷ್ಕೃತ ಪಠ್ಯವನ್ನ ಹರಿದು ಆಕ್ರೋಶ ಹೊರಹಾಕಿದ್ದಾರೆ.