Publish Date: Thu, 10 Oct 2019 (08:25 IST)
Updated Date: Thu, 10 Oct 2019 (08:26 IST)
ಬೆಂಗಳೂರು : ಕೊನೆಗೂ ವಿಧಾನಸಭಾ ಹಾಗೂ ಪರಿಷತ್ ವಿಪಕ್ಷ ನಾಯಕರನ್ನು ಆಯ್ಕೆ ಮಾಡುವುದರ ಮೂಲಕ ಕಾಂಗ್ರೆಸ್ ಹೈಕಮಾಂಡ್ ಭಾರೀ ಕುತೂಹಲಕ್ಕೆ ತೆರೆ ಎಳೆದಿದೆ.
ಕಾಂಗ್ರೆಸ್ ಹೈಕಮಾಂಡ್ ನಿನ್ನೆ ರಾತ್ರಿ ವಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನಸಭಾ ವಿಪಕ್ಷ ನಾಯಕನಾಗಿ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರನ್ನಾಗಿ ಎಸ್.ಆರ್. ಪಾಟೀಲ್ ಅವರನ್ನು ಆಯ್ಕೆ ಮಾಡಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.
ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರದ ಮೊದಲ ಅಧಿವೇಶನ ಇಂದು ನಡೆಯಲಿರುವ ಹಿನ್ನಲೆಯಲ್ಲಿ ನಿನ್ನೆ ರಾತ್ರಿಯ ವೇಳೆ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ. ವಿಧಾನಸಭೆ ವಿಪಕ್ಷ ನಾಯಕರಾದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರನ್ನು ಎಐಸಿಸಿ ಕಾರ್ಯಕಾರಿ ಸಮಿತಿಯಿಂದ ಕಾಂಗ್ರೆಸ್ ಹೈಕಮಾಂಡ್ ಹೊರಗಿಟ್ಟಿದೆ ಎನ್ನಲಾಗಿದೆ.