Publish Date: Wed, 29 Oct 2025 (17:18 IST)
Updated Date: Wed, 29 Oct 2025 (17:20 IST)
ಬೆಂಗಳೂರು: ಸಹೋದರ ಡಿಕೆ ಶಿವಕುಮಾರ್ ಅವರ ಹಣೆಯಲ್ಲಿ ಸಿಎಂ ಹುದ್ದೆ ಬರೆದಿದ್ದರೆ ಆಗುತ್ತಾರೆ, ಇಲ್ಲದಿದ್ದರೆ ಇಲ್ಲ. ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಬಮೂಲ್ ಅಧ್ಯಕ್ಷ, ಮಾಜಿ ಎಂಪಿ ಡಿಕೆ ಸುರೇಶ್ ಹೇಳಿದರು.
ಸದಾಶಿವನಗರದಲ್ಲಿ ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಅಣ್ಣನನ್ನು ಸಿಎಂ ಸ್ಥಾನದಲ್ಲಿ ನೋಡುವ ಆಸೆಯಿದೆ ಎನ್ನುವ ಈ ಹಿಂದಿನ ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿದ ಅವರು, ಅಣ್ಣನ ಹಣೆಯಲ್ಲಿ ಬರೆದಿದ್ದರೆ ಅದು ಆಗುತ್ತದೆ, ಇಲ್ಲದಿದ್ದರೆ ಇಲ್ಲ. ಪಕ್ಷ ಹೇಳಿದಂತೆ ಅವರು ನಡೆದುಕೊಳ್ಳುತ್ತಾರೆ. ಪಕ್ಷದ ಅಧ್ಯಕ್ಷರಾಗಿ, ಡಿಸಿಎಂ ಆಗಿ ಪಕ್ಷದ ಏಳಿಗೆಗೆ, ಘನತೆಗೆ ಚ್ಯುತಿ ಬರದಂತೆ ಅವರು ನಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಅವರು ಪಕ್ಷ ನಿಷ್ಠರಾಗಿ ನಡೆದುಕೊಳ್ಳುತ್ತಿದ್ದು, ಅವರು ನವೆಂಬರ್ ಕ್ರಾಂತಿ ಬಗ್ಗೆ ಗಮನ ಹರಿಸುತ್ತಿಲ್ಲ. ಪಕ್ಷದ ಅಧ್ಯಕ್ಷರಾಗಿ ಎಲ್ಲರನ್ನೂ ಸಮಾನವಾಗಿ ನೋಡಬೇಕಿರುವುದು ಅವರ ಕರ್ತವ್ಯ ಎಂದು ಹೇಳಿದರು.
ನವೆಂಬರ್ 15 ರ ನಂತರ ಏನಾದರೂ ಬದಲಾವಣೆ ಆಗುತ್ತದೆಯೇ ಎಂಬ ಪ್ರಶ್ನೆಗೆ, ನನಗೆ ನವೆಂಬರ್ ಎಂದರೆ ಕನ್ನಡ ರಾಜ್ಯೋತ್ಸವ ನೆನಪಾಗುತ್ತದೆ. ನಾವು, ನೀವೆಲ್ಲರೂ ಸೇರಿ ಈ ಹಬ್ಬವನ್ನು ಆಚರಣೆ ಮಾಡೋಣ. ಮಿಕ್ಕ ವಿಚಾರಗಳ ಬಗ್ಗೆ ನನಗೆ ತಿಳಿದಿಲ್ಲ ಎಂದು ಪ್ರತಿಕ್ರಿಯಿಸಿದರು.
ಈ ಎಲ್ಲ ಪ್ರಶ್ನೆಗಳನ್ನು ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಯವರು, ಎಐಸಿಸಿ ನಾಯಕರಿಗೆ ಕೇಳಬೇಕೆಂದರು.