Publish Date: Tue, 17 Oct 2023 (15:00 IST)
Updated Date: Tue, 17 Oct 2023 (16:38 IST)
ಮುಂದಿನ ದಿನಗಳಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಯಲಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಕಡಿಮೆ ಆಗಿದೆ, ಬರ ಕೂಡ ಘೋಷಣೆಯಾಗಿದೆ. ಆಗಸ್ಟ್, ಸೆಪ್ಟೆಂಬರ್ನಲ್ಲಿ 8 ಸಾವಿರ ಮೆಗಾ ವ್ಯಾಟ್ ಬೇಡಿಕೆ ಇತ್ತು. ಮಳೆ ಕೊರತೆ ಹಿನ್ನೆಲೆಯಲ್ಲಿ ವಿದ್ಯುತ್ ಅಭಾಯ ಸೃಷ್ಟಿಯಾಗಿದೆ. ಈ ವರ್ಷ 16 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಒಂದೇ ಸಾರಿ ಇಷ್ಟು ಡಿಮ್ಯಾಂಡ್ ಆದಾಗ ಪೂರೈಕೆ ಕಷ್ಟವಾಗುತ್ತದೆ. ಈ ಸ್ಥಿತಿಗೆ ಹಿಂದಿನ ಸರ್ಕಾರವೇ ಕಾರಣ. ಆದರೆ ನಾವು ಇಲ್ಲಿ ತನಕ ಯಾರನ್ನೂ ಬ್ಲೇಮ್ ಮಾಡಿಲ್ಲ. ಸಮಸ್ಯೆ ಗೊತ್ತಿದ್ದರೂ ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಪಾವಗಡದಲ್ಲಿ 2,300 ಮೆಗಾ ವ್ಯಾಟ್ ಉತ್ಪಾದನೆಗೆ ಪ್ಲ್ಯಾನ್ ಇದೆ. ನಾವ್ಯಾರು ಕಾಣೆಯಾಗಿಲ್ಲ, ಹಗಲು ರಾತ್ರಿ ಕೆಲಸ ಮಾಡುತ್ತಿದ್ದೇವೆ. ಹಿಂದಿನ ಮುಖ್ಯಮಂತ್ರಿ, ಸಚಿವರು ಸಲಹೆ ಕೊಟ್ಟರೆ ಪಡೆಯುತ್ತೇವೆ. ಆದರೆ ಸುಮ್ಮನೆ ಆರೋಪ ಮಾಡುವುದು ಬೇಡ ಎಂದರು.