Publish Date: Fri, 19 May 2023 (09:26 IST)
Updated Date: Fri, 19 May 2023 (08:59 IST)
ರಾಮನಗರ : ನವೆಂಬರ್ ವೇಳೆಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಗಳು ಆಗಲಿವೆ, ಕಾಯ್ದು ನೋಡಿ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಚುನಾವಣಾ ಫಲಿತಾಂಶದ ಬಳಿಕ ಇದೇ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಆಗಮಿಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ಕೃತಜ್ಞತಾ ಸಭೆಯನ್ನು ಹಮ್ಮಿಕೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ಬಹುಮತದ ಸರ್ಕಾರ ಬಂದಿದೆ ಎಂದು ಭಾವಿಸಬೇಡಿ. ಲೋಕಸಭಾ ಚುನಾವಣೆ ಬಳಿಕ ಏನು ಬೆಳವಣಿಗೆ ಆಗುತ್ತದೆ ಎಂದು ನೋಡೋಣ. ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಯಾವುದೇ ಅಂಜಿಕೆ ಬೇಡ ಎಂದರು.
ಬಿಜೆಪಿಯವರು ಲೂಟಿ ಮಾಡಿದ ರೀತಿಯಲ್ಲೆ ಕಾಂಗ್ರೆಸ್ನವರು ಲೂಟಿಗೆ ಇಳಿಯಲಿದ್ದಾರೆ. ಅದರಲ್ಲೇನೂ ಹೊಸತಿಲ್ಲ. ಯಾರನ್ನು ಎಲ್ಲಿ ಹಿಡಿಯಬೇಕೆಂದು ನನಗೆ ಚೆನ್ನಾಗಿ ತಿಳಿದಿದೆ. ನಾನು ಹೋರಾಟ ಮಾಡಲು ಸಿದ್ಧನಿದ್ದೇನೆ. ಯಾವುದೇ ಕಾರಣಕ್ಕೂ ಈ ಸರ್ಕಾರದ ಮಂತ್ರಿಗಳ ಬಳಿ ಕೈ ಚಾಚುವುದಿಲ್ಲ ಎಂದು ಸ್ಪಷ್ಟಪಡಿಸಿದರು.