Publish Date: Mon, 23 Mar 2020 (18:38 IST)
Updated Date: Mon, 23 Mar 2020 (18:40 IST)
ಕೊರೊನಾ ಪಿಡುಗನ್ನು ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮವಾಗಿ ಸಾರಿಗೆ ಸಂಸ್ಥೆಗಳ ಬಸ್ಸುಗಳ ಮತ್ತು ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಖಾಸಗಿ ವಾಹನಗಳು ದುಪ್ಪಟ್ಟು ಟಿಕೆಟ್ ದರ ವಿಧಿಸುತ್ತಿವೆ.
ಕೊರೊನಾ ವೈರಸ್ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಹೆಚ್ಚಿನ ಹಣವನ್ನು ಪ್ರಯಾಣಿಕರಿಂದ ಸುಲಿಗೆ ಮಾಡಿ ಕೆಲವೆಡೆ ಖಾಸಗಿ ವಾಹನಗಳು, ಖಾಸಗಿ ಬಸ್ಸುಗಳ ಮತ್ತು ಆಟೋರಿಕ್ಷಾಗಳ ಮಾಲೀಕರು ಪ್ರಯಾಣಿಕರನ್ನು ಶೋಷಿಸುತ್ತಿದ್ದಾರೆ. ರಾಜ್ಯದ ಬೆಳಗಾವಿ, ಚಿಕ್ಕೋಡಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂತಹ ಪ್ರಕರಣಗಳು ಕಂಡು ಬರುತ್ತಿದ್ದು, ಅಂಥವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಲಕ್ಷ್ಮಣ ಸವದಿ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಕೆಲವು ಜಿಲ್ಲೆಗಳನ್ನು ಈಗಾಗಲೇ ಲಾಕ್ ಔಟ್ ಜಿಲ್ಲೆಗಳೆಂದು ಘೋಷಿಸಲಾಗಿದ್ದು, ಇಂತಹ ಕಡೆಗಳಿಗೆ ಅಂತರ್ ಜಿಲ್ಲಾ ಬಸ್ಸುಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತರಕ್ಷಣೆಯನ್ನು ಗಮನಿಸಿ ಕೈಗೊಳ್ಳಲಾದ ಸರ್ಕಾರದ ಈ ನಿರ್ಧಾರವನ್ನು ಯಾರೂ ಉಲ್ಲಂಘಿಸಬಾರದು. ಈಗಾಗಲೇ ಇಂತಹ ಪ್ರಕರಣಗಳನ್ನು ತಡೆಗಟ್ಟಬೇಕೆಂದು ಸಾರಿಗೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.