Publish Date: Sun, 30 Jan 2022 (14:24 IST)
Updated Date: Sun, 30 Jan 2022 (17:34 IST)
ಅನಧಿಕೃತ ಸ್ಥಳಗಳಲ್ಲಿ ನಿಲುಗಡೆ ಮಾಡುವ ವಾಹನಗಳನ್ನು ಟೋಯಿಂಗ್ ವ್ಯವಸ್ಥೆಯಲ್ಲಿನ ಲೋಪಗಳನ್ನು ಸರಿಪಡಿಸಿ, ಸುಧಾರಣೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, 'ಹಿಂದೆ ಪೊಲೀಸ್ ಇಲಾಖೆಯೇ ಟೋಯಿಂಗ್ ಕೆಲಸವನ್ನು ನಿರ್ವಹಿಸುತ್ತಿತ್ತು.
ಖಾಸಗಿಯವರಿಗೆ ಗುತ್ತಿಗೆಗೆ ನೀಡಲಾಗಿದೆ. ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳಿಂದ ಟೋಯಿಂಗ್ ವ್ಯವಸ್ಥೆ ಕುರಿತು ಪುನರ್ ಪರಿಶೀಲನೆ ಅಗತ್ಯ ಎಂಬ ತೀರ್ಮಾನಕ್ಕೆ ಬರಲಾಗಿದೆ' ಎಂದರು.
ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಅಗತ್ಯ. ಆದರೆ, ಕಾನೂನು ಜಾರಿಯ ಹೆಸರಿನಲ್ಲಿ ಅತಿರೇಕದ ವರ್ತನೆಗಳನ್ನೂ ಸಹಿಸಲಾಗದು. ಜನಸ್ನೇಹಿಯಾದ ವ್ಯವಸ್ಥೆಯನ್ನು ರೂಪಿಸುವ ಕುರಿತು ಯೋಚಿಸಲಾಗುತ್ತಿದೆ ಎಂದು ಹೇಳಿದರು.
ಟೋಯಿಂಗ್ ವ್ಯವಸ್ಥೆಯ ಸುಧಾರಣೆಗೆ ಸಂಬಂಧಿಸಿದಂತೆ ಸೋಮವಾರ ಉನ್ನತ ಮಟ್ಟದ ಸಭೆ ನಡೆಸಲಾಗುವುದು. ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಕಮಿಷನರ್, ಹೆಚ್ಚುವರಿ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದರು.