Publish Date: Sun, 27 Feb 2022 (16:52 IST)
Updated Date: Sun, 27 Feb 2022 (17:57 IST)
ಉಕ್ರೇನ್ ನಲ್ಲಿರುವ ಇನ್ನುಳಿದ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮಕೈಗೊಳ್ಳುತ್ತಿದ್ದೇವೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲ ವಿದ್ಯಾರ್ಥಿಗಳು ರೊಮೆನಿಯಾ ಮೂಲಕ ಭಾರತಕ್ಕೆ ಮರಳಿದ್ದಾರೆ
ಮುಂಬೈ ಹಾಗೂ ನವದೆಹಲಿಗೆ ಆಗಮಿಸಿರುವ ವಿದ್ಯಾರ್ಥಿಗಳನ್ನು ಬೆಂಗಳೂರಿಗೆ ಸರ್ಕಾರವೇ ಎಲ್ಲ ವ್ಯವಸ್ಥೆ ಮಾಡಿ ಕರೆತರಲಾಗುತ್ತಿದೆ. ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ವಿದ್ಯಾರ್ಥಿಗಳ ಪ್ರಯಾಣ ಹಾಗೂ ಇನ್ನಿತರ ವೆಚ್ಚಗಳನ್ನು ಭರಿಸಲಾಗುತ್ತಿದೆ ಎಂದರು. ಇನ್ನೂ ಉಕ್ರೇನ್ ನಿಂದ ಇನ್ನುಳಿದ ವಿದ್ಯಾರ್ಥಿಗಳನ್ನು ಕರೆತರಲು ಕೇಂದ್ರ ವಿದೇಶಾಂಗ ಸಚಿವರ ಜೊತೆ ಮುಖ್ಯಮಂತ್ರಿಗಳು ನಿರಂತರ ಸಂಪರ್ಕದಲ್ಲಿದ್ದಾರೆ. ಕೇಂದ್ರ ಹಾಗೂ ರಾಜ್ಯದ ಸಹಾಯ ವಾಣಿಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ. ಹಲವಾರು ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆಗೆ ಚರ್ಚಿಸಲಾಗಿದೆ. ಉಕ್ರೇನ್ ನ ಕಾರ್ಕೈವ್ ನಲ್ಲಿ ಬಹಳಷ್ಟು ವಿದ್ಯಾರ್ಥಿಗಳು ಸಿಲುಕಿದ್ದು, ಅದೇ ಪ್ರದೇಶದಲ್ಲಿ ಪ್ರಸ್ತುತ ಯುದ್ಧ ನಡೆಯುತ್ತಿರುವುದಾಗಿ ತಿಳಿದುಬಂದಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.