Publish Date: Wed, 28 Aug 2024 (19:02 IST)
Updated Date: Wed, 28 Aug 2024 (19:08 IST)
ಬೆಂಗಳೂರು: ಸಕ್ಕರೆ ಕಾರ್ಖಾನೆ ಆರಂಭಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡದ್ದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡೆಸಿದ ಪ್ರತಿಭಟನೆಗೆ ಅಚ್ಚರಿ ಎಂಬಂತೆ ಬಬಿಜೆಪಿ ರಾಜ್ಯಾಧ್ಯಕ್ಷ ಬೆಂಬಲ ಸೂಚಿಸಿದ್ದಾರೆ.
ವಿಜಯೇಂದ್ರ ಅವರ ಈ ನಡೆ, ಹೈಕಮಾಂಡ್ ಸೂಚನೆಯಂತೆ ರಾಜಿಗೆ ಮುಂದಾಗಿದ್ದಾರಾ ಎನ್ನುವ ಚರ್ಚೆ ರಾಜಕೀಯ ವಲಯದಲ್ಲಿ ಶುರುವಾಗಿದೆ.
ಬಸನಗೌಡ ಪಾಟೀಲ್ ನಡೆಸಿದ ಪ್ರತಿಭಟನೆಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿರುವ ವಿಜಯೇಂದ್ರ ಅವರು, ಬಿಜೆಪಿ ಶಾಸಕರ ನಡೆ ನ್ಯಾಯೋಚಿತ. ಸರ್ಕಾರ ಕ್ರಮ ಕೈಗೊಳ್ಳದಿದ್ರೆ ಕಾರ್ಖಾನೆ ವಿಷಯದಲ್ಲೂ ದ್ವೇಷದ ರಾಜಕಾರಣ ಎಂಬ ನಿರ್ಧಾರಕ್ಕೆ ಬರಬೇಕಾಗುತ್ತೆ ಎಂದು ಟ್ವೀಟ್ ಮಾಡಿದ್ದಾರೆ.
ನ್ಯಾಯಾಲಯದ ಆದೇಶದ ನಂತರವೂ ಸಕ್ಕರೆ ಕಾರ್ಖಾನೆಯನ್ನು ಪುನಾರಂಭಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡದೇ ಇರುವುದರ ವಿರುದ್ಧ ಯತ್ನಾಳ್ ಅವರು ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಭೇಟಿ ನೀಡಿ ಅವರಿಗೆ ಬೆಂಬಲ ನೀಡಿದರು.
ಇದೀಗ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಟ್ವೀಟ್ ಮಾಡಿ ಯತ್ನಾಳ್ ಪರ ಬೆಂಬಲ ಸೂಚಿಸಿದ್ದಾರೆ.