Publish Date: Sun, 23 Jan 2022 (17:16 IST)
Updated Date: Sun, 23 Jan 2022 (19:17 IST)
ಶಿವಮೊಗ್ಗ : ಕೊರೊನಾ ಹರಡದಂತೆ ತಡೆಯಲು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾ ಇರಿಸಬೇಕು ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಭಾನುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕುರಿತು ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ತಜ್ಞ ವೈದ್ಯರ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿ ಪ್ರಕಾರ ಶಾಲಾ ಕಾಲೇಜುಗಳನ್ನು ನಡೆಸಬೇಕು. ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುವ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಅವರ ಅನುಮತಿ ಪಡೆದ ಬಳಿಕ ರಜೆ ನೀಡಬಹುದಾಗಿದೆ.
ಅನಾರೋಗ್ಯದಿಂದ ಗೈರು ಹಾಜರಾಗುವ ವಿದ್ಯಾರ್ಥಿಗಳಿಗೆ ಹಾಜರಾತಿಯನ್ನು ಕಡ್ಡಾಯಗೊಳಿಸಬಾರದು. ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿರಂತರ ನಿಗಾ ವಹಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಲಸಿಕೆ ಪಡೆದವರ ಪ್ರಮಾಣ ರಾಜ್ಯಮಟ್ಟಕ್ಕೆ ಹೋಲಿಸಿದರೆ ಕಡಿಮೆಯಿದೆ. ಅಭಿಯಾನದ ರೀತಿಯಲ್ಲಿ ಲಸಿಕೆಯನ್ನು ಪ್ರತಿಯೊಬ್ಬರಿಗೂ ನೀಡಬೇಕು. ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಮೂರನೇ ಡೋಸ್ ನೀಡುವ ಕಾರ್ಯವನ್ನು ಚುರುಕುಗೊಳಿಸಬೇಕು.
ಜಿಲ್ಲೆಯಲ್ಲಿ ಪ್ರಸ್ತುತ ಪಾಸಿಟಿವ್ ವ್ಯಕ್ತಿಗಳ ಹೋಂ ಕ್ವಾರಂಟೈನ್ ಪ್ರಮಾಣ ಶೇ.95ರಷ್ಟಿದ್ದು, ಪ್ರಾಥಮಿಕ ಸಂಪರ್ಕಿತರಿಗೆ ಕನಿಷ್ಟ 3 ದಿನ ಹೋಂ ಕ್ವಾರಂಟೈನ್ ಖಾತ್ರಿಪಡಿಸಬೇಕು. ಹೋಂ ಕ್ವಾರಂಟೈನ್ನಲ್ಲಿ ಇರುವವರಿಗೆ ಅಗತ್ಯ ಔಷಧಿಗಳನ್ನು ಒಳಗೊಂಡ ಕಿಟ್ ಕಡ್ಡಾಯವಾಗಿ ಒದಗಿಸಬೇಕು ಎಂದರು.