Publish Date: Thu, 28 Apr 2022 (14:28 IST)
Updated Date: Thu, 28 Apr 2022 (19:31 IST)
ಬೆಂಗಳೂರು : ನಮ್ಮ ದೇಶ ಅನೇಕ ಭಾಷೆಗಳಿಂದ ಕೂಡಿದ್ದು, ಪ್ರತಿಯೊಬ್ಬರಿಗೂ ಅವರವರ ಭಾಷೆ ಸ್ವಾಭಿಮಾನದ ವಿಷಯವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಹಿಂದಿ ರಾಷ್ಟ್ರಭಾಷೆ ವಿವಾದ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನಾನು ಯಾರ ಟ್ವೀಟ್ ಬಗ್ಗೆಯೂ ಪ್ರತಿಕ್ರಿಯೆ ನೀಡಲು ಸಿದ್ದನಿಲ್ಲ. ದೇಶದಲ್ಲಿ ಯಾವ, ಯಾವ ಭಾಷೆಗೆ ಯಾವ ಮಾನ್ಯತೆ ನೀಡಬೇಕು ಎಂದು ಸರ್ಕಾರ ಈಗಾಗಲೇ ತೀರ್ಮಾನ ಮಾಡಿದೆ.
ನಮ್ಮ ದೇಶ ಅನೇಕ ಭಾಷೆಗಳಿಂದ ಕೂಡಿದ್ದು, ಪ್ರತಿಯೊಬ್ಬರಿಗೂ ಅವರವರ ಭಾಷೆ ಸ್ವಾಭಿಮಾನದ ವಿಷಯವಾಗಿದೆ. ನಮ್ಮ ರಾಜ್ಯದ ಕೊಡಗು, ಮಂಗಳೂರು ಭಾಗಗಳಲ್ಲಿ ಬೇರೆ ಭಾಷೆಗಳನ್ನು ಮಾತನಾಡಿದರೂ, ನಾವು ಅವರನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದರು.
ನಾವೆಲ್ಲ ಕನ್ನಡಿಗರು. ನಮಗೆ ನಮ್ಮದೇ ಆದ ಭಾಷೆ, ಧ್ವಜ, ಸ್ವಾಭಿಮಾನವಿದೆ. ನಮ್ಮ ನೋಟಿನಲ್ಲಿ ಕನ್ನಡ ಸೇರಿದಂತೆ ಹಲವು ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ ನೀಡಿ ಮುದ್ರಣ ಮಾಡಲಾಗಿದೆ. ಈ ನೋಟು ರಾಜ್ಯ ಸೇರಿದಂತೆ ರಾಷ್ಟ್ರದಲ್ಲಿ ಚಲಾವಣೆಯಾಗುತ್ತದೆ. ಹೀಗಾಗಿ ಭಾಷೆ ವಿಚಾರದಲ್ಲಿ ಚರ್ಚೆಯ ಅಗತ್ಯ ಏನಿದೆ ಎಂದು ಪ್ರಶ್ನಿಸಿದರು.
ದೇಶದ ಉತ್ತರ ಭಾಗದಲ್ಲಿ ಹಿಂದಿ ಭಾಷೆ ಮಾತನಾಡುತ್ತಿದ್ದು, ಆ ಭಾಷೆಗೆ ಯಾವ ರೀತಿ ಗೌರವ ನೀಡಬೇಕೋ ಅದನ್ನು ನೀಡಲಾಗುತ್ತಿದೆ.