ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯ ಹೊಣೆಯನ್ನು ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರಿಗೆ ವಹಿಸಲಾಗಿತ್ತು. ಆದಾಗ್ಯೂ, ಸೋಲು ಗೆಲುವನ್ನು ಸಾಮೂಹಿಕ ಹೊಣೆಯ ರೀತಿಯಲ್ಲಿ ಸ್ವೀಕರಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಅತಂತ್ರವಾಗಿರುವ ಜಿಲ್ಲೆಗಳಲ್ಲಿ ಹೈಕಮಾಂಡ್ ಒಪ್ಪಿಗೆ ಪಡೆದ ನಂತರ ಜೆಡಿಸ್ ಪಕ್ಷದೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದ ಎಂಟು ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲಿ ಜೆಡಿಎಸ್ ನಿರ್ಣಾಯಕ ಪಾತ್ರವಹಿಸಲಿರುವುದರಿಂದ ಹೈಕಮಾಂಡ್ನ ತಾತ್ವಿಕ ಒಪ್ಪಿಗೆ ಪಡೆದು ಜೆಡಿಎಸ್ ವರಿಷ್ಛ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿಯವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದರು.
ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಹೊತ್ತಿರುವ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರೊಂದಿಗೂ ಕೂಡಾ ಚರ್ಚೆ ನಡೆಸಿದ ನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆದ ಹಿನ್ನೆಡೆ ಕುರಿತಂತೆ ಪಕ್ಷದ ವೇದಿಕೆಯಲ್ಲಿ ವಿಶ್ಲೇಷಣೆ ನಡೆಸಲಾಗುವುದು. ಪಕ್ಷದ ಸೋಲು ಗೆಲುವಿಗೆ ಪಕ್ಷದ ಎಲ್ಲಾ ಮುಖಂಡರು ಸಾಮೂಹಿಕ ಹೊಣೆಯಾಗಿದ್ದಾರೆ ಎಂದರು.
ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ತ್ವರಿತಗತಿಯಲ್ಲಿ ಯೋಜನೆಗಳ ಅನುಷ್ಠಾನ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಮಗೆಲ್ಲಾ ಸೂಚನೆ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ, ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.