Publish Date: Sat, 11 Jun 2022 (19:08 IST)
Updated Date: Sat, 11 Jun 2022 (19:09 IST)
ರಾಜ್ಯಾದ್ಯಂತ ಮುಂದಿನ ವಾರದಿಂದ ಮುಂಗಾರು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 13 ರ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಮುಂಗಾರು ಮಾರುತಗಳು ರಾಜ್ಯವನ್ನು ಪ್ರವೇಶಿಸಿ ಒಂದು ವಾರ ಕಳೆದಿದೆ.
ಈ ಅವಧಿಯಲ್ಲಿ ವಾಡಿಕೆಗಿಂತ ಶೇಕಡ 11 ರಷ್ಟು ಮಳೆ ಕಡಿಮೆಯಾಗಿದೆ. ಜೂನ್ 3 ರಿಂದ 9ರ ವರೆಗಿನ ಅವಧಿಯಲ್ಲಿ ವಾಡಿಕೆಯಂತೆ 38 ಮಿ.ಮೀ. ಮಳೆಯಾಗಬೇಕಿತ್ತು. 34 ಮಿ.ಮೀ. ನಷ್ಟು ಮಳೆಯಾಗಿದೆ.
ಮುಂಗಾರು ಪ್ರವೇಶಿಸುವ ಸಂದರ್ಭದಲ್ಲಿ ಮಳೆ ಪ್ರಮಾಣ ಕಡಿಮೆ ಇದ್ದು, ಮುಂದಿನ ವಾರದಿಂದ ರಾಜ್ಯಾದ್ಯಂತ ಮುಂಗಾರು ಆವರಿಸಲಿದೆ. ಜೂನ್ 13ರ ನಂತರ ಮುಂಗಾರು ಚುರುಕುಗೊಳ್ಳಲಿದೆ ಎಂದು ಹೇಳಲಾಗಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 10 ರಿಂದ 12ರವರೆಗೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಜೂನ್ 13ರ ನಂತರ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಧಿಕ ಮಳೆ ಸುರಿಯಲಿದೆ ಎಂದು ಹೇಳಲಾಗಿದೆ.