Publish Date: Fri, 26 Nov 2021 (13:01 IST)
Updated Date: Fri, 26 Nov 2021 (17:04 IST)
ಕೊರೋನಾದಿಂದ ಉಂಟಾದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ವೆಚ್ಚ ಕಡಿತ ಮಾಡಲು ಕಲ್ಯಾಣ ಕರ್ನಾಟಕ ಭಾಗದ ವಿವಿಧ ಹುದ್ದೆಗಳ ನೇಮಕಾತಿಗೆ ತಡೆ ನೀಡಿದ್ದ ಆದೇಶವನ್ನು ಸರ್ಕಾರ ಹಿಂಪಡೆದಿದ್ದು,
ಷರತ್ತುಗಳೊಂ ದಿಗೆ ನೇರ ನೇಮಕಕ್ಕೆ ಅವಕಾಶ ನೀಡಿ ಆದೇಶ ನೀಡಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಲು ವಿವಿಧ ಇಲಾಖೆಗಳಲ್ಲಿ ಅಧಿಕಾರಿ, ಸಿಬ್ಬಂದಿ ಕೊರತೆ ಉಂಟಾಗಿದೆ.
ಹೀಗಾಗಿ ಆ ಭಾಗದಲ್ಲಿ ನೇರ ನೇಮ ಕಾತಿಯಲ್ಲಿ ಬಾಕಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಂತದಲ್ಲಿಯೇ ನೇಮಕಾತಿ ಪ್ರಕ್ರಿಯೆ ಮುಂದುವರೆಸಿ ನಿಯಮಾನುಸಾರ ಭರ್ತಿ ಮಾಡಿಕೊಳ್ಳಲು ಸೂಚಿಸಲಾಗಿದೆ.
ಕಲ್ಯಾಣ ಕರ್ನಾಟಕ ವೃಂದದಲ್ಲಿ ಈಗಾಗಲೇ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಸಹಮತಿ ನೀಡಿರುವ ಪ್ರಕರಣಗಳಲ್ಲಿ ನೇಮಕಾತಿ ಆದೇಶ ನೀಡಬೇಕು. ಉಳಿದ ಇಲಾಖೆಗಳಲ್ಲಿ ವೃಂದ ಬಲ ಶೇ.80ಕ್ಕಿಂತ ಕಡಿಮೆ ಇದ್ದರೆ ಮಾತ್ರ ವೃಂದದ ಶೇ.80ರಷ್ಟರವರೆಗಿನ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಬಹುದು.