Publish Date: Fri, 26 Nov 2021 (17:46 IST)
Updated Date: Fri, 26 Nov 2021 (17:50 IST)
ಮೈಸೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯು 15 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ 65 ವಾರ್ಡ್ಗಳ ಮಹಾಶಕ್ತಿ ಕೇಂದ್ರದ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಯಿಂದ ಪರಿಷತ್ಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ.
ರಾಜ್ಯದಲ್ಲಿ ಬಿಜೆಪಿ ಆಯೋಜಿಸಿದ್ದ ಜನಸ್ವರಾಜ್ ಸಮಾವೇಶದಲ್ಲಿ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಕ್ಷವು 25 ಸ್ಥಾನಗಳ ಪೈಕಿ ಹೆಚ್ಚಿನ ಸೀಟು ಗೆಲ್ಲಲು ತಯಾರಿ ಆರಂಭಿಸಿದ್ದೇವೆ. ಈ ಪೈಕಿ ಕನಿಷ್ಠ 15 ಸೀಟು ಗೆಲ್ಲುತ್ತೇವೆ ಎಂದರು.
ಮೇಲ್ಮನೆಯಲ್ಲಿ ಬಿಜೆಪಿ ಬಹುಮತಕ್ಕೆ 12 ಸೀಟು ಕೊರತೆ ಇದೆ. ಈ ಚುನಾವಣೆಯಲ್ಲಿ ಬಹುಮತ ಪಡೆಯುತ್ತೇವೆ. ಜೆಡಿಎಸ್ನಿಂದ 7 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಉಳಿದ ಕಡೆ ಬೆಂಬಲ ನೀಡುವಂತೆ ಮಾಜಿ ಸಿಎಂ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ. ಹಾಗಂತ ಅವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಕಾಂಗ್ರೆಸ್ ನಿರುದ್ಯೋಗಿಗಳ ಕೂಟವಾಗಿದೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಪರಮೇಶ್ವರ್ ಅವರಿಗೆ ಬಿಜೆಪಿ ಟೀಕಿಸುವುದೇ ಕೆಲಸ. ಇಲ್ಲಸಲ್ಲದ ಟೀಕೆ ಮಾಡುವುದರಿಂದ ಅವರ ಗೌರವ ಕಡಿಮೆಯಾಗುತ್ತದೆ ಎಂದರು.
ಕಾಂಗ್ರೆಸ್ 5 ದಶಕದಿಂದ ಆಡಳಿತ ನಡೆಸಿದೆ. 39 ವರ್ಷ ಒಂದೇ ಕುಟುಂಬದವರು ಪ್ರಧಾನಿಯಾಗಿದ್ದರು. ಈಗ ಅಳಿವಿನಂಚಿನಲ್ಲಿದೆ. ಪ್ರಾದೇಶಿಕ ಪಕ್ಷಗಳಿಗಿಂತ ಕಡಿಮೆ ಶಾಸಕರು, ಸಂಸದರನ್ನು ಹೊಂದಿದೆ. ಧ್ವಜ ಕಟ್ಟಲು ಜನರಿಲ್ಲದ ಪಕ್ಷವೀಗ ಪ್ರಪಂಚದ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ ಎಂದೂ ಸೈದ್ಧಾಂತಿಕವಾಗಿ ರಾಜಿ ಮಾಡಿಕೊಂಡಿಲ್ಲ. ಸೈದ್ಧಾಂತಿಕವಾಗಿ ರಾಜಿಯಾಗುವ ಪಕ್ಷಗಳು ಬೇಗ ಅವಸಾನವಾಗುತ್ತವೆ ಎಂದು ಅವರು ಹೇಳಿದರು.