Publish Date: Thu, 02 Apr 2020 (17:00 IST)
Updated Date: Thu, 02 Apr 2020 (17:03 IST)
ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನೆಯಲ್ಲಿ ದೇಶಾದ್ಯಂತ ಲಾಕ್ಡೌನ್ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಸಚಿವರು ವಿಡಿಯೋ ಸಂವಾದ ನಡೆಸಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ತಗೆದುಕೊಂಡ ಕ್ರಮಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ ಪಾಟೀಲ ಅವರು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಚರ್ಚೆ ನಡೆಸಿದರು.
ಕೋವಿಡ್-19 ನಿಯಂತ್ರಣದ ಕುರಿತಂತೆ ವಿಡಿಯೋ ಸಂವಾದದ ಮೂಲಕ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ ಪ್ರತಿಬಂಧ ಕಾಯ್ದೆ ಪಾಲನೆ, ವಿದೇಶದಿಂದ ಹಾಗೂ ಕೋವಿಡ್-19 ಬಾಧಕ ಪ್ರದೇಶಗಳಿಂದ ಜಿಲ್ಲೆಗೆ ಆಗಮಿಸಿದವರ ಕುರಿತು ನಿರಂತರ ನಿಗಾ ವಹಿಸಬೇಕು.
ನಗರ ಗ್ರಾಮಿಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೋವಿಡ್-19 ಸೋಂಕು ತಡೆಯಲು ಜನ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕು. ಜನತೆ ಸದಾ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಅವರಿಗೆ ದಿನಸಿ ಸಾಮಾನು ಹಾಗೂ ಅವಶ್ಯಕ ವಸ್ತುಗಳನ್ನು ಒದಗಿಸುವಿಕೆಯನ್ನು ಗಮನಿಸಬೇಕು. ರೈತರ ಬೆಳೆ ಮಾರಾಟಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಪ್ರತಿ ದಿನದ ಕೋವಿಡ್-19 ರೋಗದ ಬಗ್ಗೆ ಮಾಹಿತಿಯನ್ನು ದೂರವಾಣಿ ಮೂಲಕ ನೀಡಬೇಕು ಎಂದು ತಿಳಿಸಿದರು.