Publish Date: Sat, 09 Feb 2019 (17:17 IST)
Updated Date: Sat, 09 Feb 2019 (17:19 IST)
ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವಂತೆ ಶಾಸಕ ಬಿ.ಸಿ.ಪಾಟೀಲ್ ಕೂಡ ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆ ಅತೃಪ್ತ ಕಾಂಗ್ರೆಸ್ ಶಾಸಕರ ಗುಂಪಿನಲ್ಲಿ ಕಾಣಿಸಿಕೊಂಡಿದ್ದ ಬಿ.ಸಿ. ಪಾಟೀಲ್ ನಡೆ ಚರ್ಚೆಗೆ ಈಗ ಕಾರಣವಾಗಿದೆ.
ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯವನರನ್ನು ಭೇಟಿ ಮಾಡಿರುವ ಬಿ.ಸಿ.ಪಾಟೀಲ್ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯನವರ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿದ ಬಿ.ಸಿ. ಪಾಟೀಲ್, ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದರು. ಬಿ.ಸಿ. ಪಾಟೀಲ್ ಮುಂಬೈಗೆ ತೆರಳಿ ಅಲ್ಲಿ ಬೀಡುಬಿಟ್ಟಿರುವ ಅತೃಪ್ತ ಶಾಸಕರ ಬಣಕ್ಕೆ ಸೇರ್ಪಡೆಯಾಗಿದ್ದಾರೆಂಬ ಸುದ್ದಿಗಳು ಮಾಧ್ಯಮಗಳಲ್ಲಿ ಬಿತ್ತರಗೊಂಡ ಬೆನ್ನಲ್ಲೇ ಅವರು, ಸಿದ್ದರಾಮಯ್ಯ ಅವರನ್ನು ಭೇಟಿಮಾಡಿರುವುದು ಕುತೂಹಲಕ್ಕೆ ಎಡೆಮಾಡಿದೆ.
ಈ ನಡುವೆ ಕಾಂಗ್ರೆಸ್ ಅತೃಪ್ತ ಶಾಸಕರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಉಮೇಶ್ ಜಾಧವ್, ಬಿ. ನಾಗೇಂದ್ರ, ಮಹೇಶ್ ಕಮಟಳ್ಳಿ, ಮುಂಬೈಯಲ್ಲಿ ಇದ್ದಾರೆಂದು ಹೇಳಲಾಗಿದೆ.
ಸಚಿವ ಸ್ಥಾನಕ್ಕೆ ತಮ್ಮನ್ನು ಪರಿಗಣಿಸದ ಹಿನ್ನೆಲೆಯಲ್ಲಿ ಅಸಮಾಧಾನವಾಗಿರುವುದು ನಿಜ. ಹಾಗಂತ ನಾನು ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ ಎಂದು ಹಿರೆಕೆರೂರು ಶಾಸಕ ಬಿ.ಸಿ. ಪಾಟೀಲ್ ಹೇಳಿದ್ದಾರೆ. ತಾವು ಅತೃಪ್ತರೊಂದಿಗೆ ಸೇರಿಲ್ಲ ಎಂದೂ ಹೇಳಿದ್ದಾರೆ.