Publish Date: Fri, 13 Jun 2025 (14:36 IST)
Updated Date: Fri, 13 Jun 2025 (14:39 IST)
ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ದುರಂತಕ್ಕೆ ಸರ್ಕಾರವೇ ಹೊಣೆ ಎಂದು ಇಂದು ಕರ್ನಾಟಕ ಬಿಜೆಪಿ ನಾಯಕರು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಆದರೆ ಅದನ್ನು ಕೊನೆ ಕ್ಷಣದಲ್ಲಿ ಕೈ ಬಿಡಲಾಗಿದೆ. ಅದಕ್ಕೆ ಕಾರಣ ಇಲ್ಲಿದೆ.
ಜೂನ್ 4 ರಂದು ಚಿನ್ನಸ್ವಾಮಿ ಮೈದಾನದ ಬಳಿ ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೆಎಸ್ ಸಿಎ, ಆರ್ ಸಿಬಿ ಮತ್ತು ಪೊಲೀಸರ ಮೇಲೆ ಆರೋಪ ಹೊರಿಸಿದೆ. ಘಟನೆಗೆ ಸಂಬಂಧಪಟ್ಟಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನೂ ಬಂಧಿಸಲಾಗಿದೆ.
ಇದರ ಬೆನ್ನಲ್ಲೇ ಇಂದು ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ರಾಜ್ಯ ಬಿಜೆಪಿ ಘಟಕ ಘೋಷಿಸಿತ್ತು. ಆದರೆ ಈಗ ಕೊನೆಯ ಕ್ಷಣದಲ್ಲಿ ಪ್ರತಿಭಟನೆಯನ್ನು ಇಂದು ನಡೆಸುವುದಿಲ್ಲ. ಮುಂದೂಡಲಾಗಿದೆ ಎಂದು ಪ್ರಕಟಣೆ ನೀಡಿದೆ.
ಇದಕ್ಕೆ ಕಾರಣ ಗುಜರಾತ್ ನಲ್ಲಿ ಸಂಭವಿಸಿದ ವಿಮಾನ ದುರಂತ. ಗುಜರಾತ್ ನಲ್ಲಿ ವಿಮಾನ ದುರಂತ ಸಂಭವಿಸಿ ದೇಶದಾದ್ಯಂತ ದುಃಖ ಮಡುಗಟ್ಟಿದೆ. ಇಂತಹ ಸಂದರ್ಭದಲ್ಲಿ ಪ್ರತಿಭಟನೆ ಬೇಡ ಎಂಬ ಕಾರಣಕ್ಕೆ ಮುಂದೂಡಲಾಗಿದೆ ಎಂದು ರಾಜ್ಯ ಬಿಜೆಪಿ ಘಟಕ ಪ್ರಕಟಣೆ ನೀಡಿದೆ.