Publish Date: Wed, 13 Sep 2023 (12:33 IST)
Updated Date: Wed, 13 Sep 2023 (12:34 IST)
ಬೆಂಗಳೂರು : ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸೋ ಕೆಲಸ ಸಮರ್ಪಕವಾಗಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಡಿಸಿ, ಸಿಇಒಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಡಿಸಿ, ಸಿಇಒಗಳ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3 ಜಿಲ್ಲೆಗಳಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟಿದ್ದಾರೆ, ಅಸ್ವಸ್ಥರಾಗಿದ್ದಾರೆ. ಚಿತ್ರದುರ್ಗದಲ್ಲಿ ಕಲುಷಿತ ನೀರು ಕುಡಿದು 6 ಜನ ಸತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸಬಾರದು.
ಇದಕ್ಕೆ ಬೇಕಾದ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದರು. ಇತ್ತೀಚೆಗೆ ಡೆಂಗ್ಯೂ ಜ್ವರ ಜಾಸ್ತಿ ಆಗಿದೆ. ವಿಶೇಷವಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ 4,000ಕ್ಕೂ ಹೆಚ್ಚು ಪ್ರಕರಣಗಳು ಕಂಡು ಬಂದಿವೆ. ಈ ಸಾಂಕ್ರಾಮಿಕ ತಡೆಗಟ್ಟಲು ಒತ್ತು ನೀಡಬೇಕು ಎಂದರು.
ಮತ್ತೆ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು, ಕೂಡಲೆ ಲಸಿಕೆ ಹಾಕುವ ಕೆಲಸ ಪ್ರಾರಂಭ ಮಾಡಬೇಕು. ಕಾಲುಬಾಯಿ ಜ್ವರ ರೋಗಕ್ಕೂ ಲಸಿಕೆ ಹಾಕಬೇಕು. ಗೊಬ್ಬರವನ್ನು ಎಂಆರ್ಪಿ ದರಕ್ಕಿಂತ ಹೆಚ್ಚು ದರಕ್ಕೆ ಮಾರಾಟ ಮಾಡುವುದಕ್ಕೆ ಕಡಿವಾಣ ಹಾಕಬೇಕು. ನಿಮ್ಮ ವೈಫಲ್ಯದಿಂದ ಜನರ ನಿರೀಕ್ಷೆ ಹುಸಿಯಾಗಬಾರದು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.