Publish Date: Sun, 15 Sep 2024 (12:50 IST)
Updated Date: Sun, 15 Sep 2024 (12:54 IST)
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯದ 31 ಜಿಲ್ಲೆಗಳಲ್ಲಿ ಏಕಕಾಲಕ್ಕೆ ನಡೆಯುವ ಮಾನವ ಸರಪಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಿಧಾನ ಸೌಧದ ಮುಂಭಾಗದಲ್ಲಿರುವ ಭವ್ಯ ಮೆಟ್ಟಿಲುಗಳ ಬಳಿ ನಗಾರಿ ಭಾರಿಸುವ ಮೂಲಕ ಚಾಲನೆ ನೀಡಿದರು. ರಾಜ್ಯ ಸರ್ಕಾರವು ಆಯೋಜಿಸಿರುವ ಈ ಸರಪಳಿಯಲ್ಲಿ 25 ಲಕ್ಷಕ್ಕೂ ಅಧಿಕ ಮಂದಿ 2,500 ಕಿಮಿ ಉದ್ದದ ಮಾನವ ಸರಪಳಿ ಇದಾಗಿದೆ. ಇದು ವಿಶ್ವ ದಾಖಲೆಗೂ ಮಾನ್ಯತೆ ಪಡೆಯುವ ಸಾಧ್ಯತೆಯಿದೆ.
ಈ ಸರಪಳಿಯಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳು, ರಾಜಕೀಯ ಮುಖಂಡರು, ವಿದ್ಯಾರ್ಥಿಗಳು, ಜನ ಸಾಮಾನ್ಯರು ಪಾಲ್ಗೊಂಡಿದ್ದಾರೆ. ತ್ರಿವರ್ಣ ಧ್ವಜ ಹಿಡಿದು ಘೋಷಣೆ ಕೂಗಿದರು. ಕೆಲವು ಮಕ್ಕಳು ತಾಯಿ ಭುವನೇಶ್ವರಿ ಹಾಗೂ ಭಾರತಾಂಬೆಯ ವೇಷ ಧರಿಸಿ ಗಮನ ಸೆಳೆದರು.
ಈ ವಿಶ್ವ ದಾಖಲೆಯ ಕಾರ್ಯಕ್ರಮದಲ್ಲಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರುಗಳಾದ ಡಾ. ಹೆಚ್.ಸಿ. ಮಹಾದೇವಪ್ಪ, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ವಿಧಾನ ಸಭಾ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ರಿಜ್ವಾನ್ ಅರ್ಷದ್, ಯು.ಬಿ.ವೆಂಕಟೇಶ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕಾರ್ಯಕ್ರಮದ ರಾಯಭಾರಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಸೇರಿದಂತೆ ಹಲವರು ಉಪಸ್ಥಿತರಿದ್ದರು.