ಬಿಎಸ್ವೈ ಹತಾಶೆಯಿಂದ ರಾಜಕೀಯ ಮಾಡುತ್ತಿದ್ದಾರೆ. ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ಸಂಭಾಷಣೆಯಲ್ಲಿ ಸರಕಾರದ ವಿರುದ್ಧ ಷಡ್ಯಂತ್ರ ರಚಿಸುತ್ತಿರುವುದು ಸಾಬೀತಾಗಿದೆ. ಇನ್ನೆರಡು ದಿನಗಳಲ್ಲಿ ಅವರ ಬಂಡವಾಳ ಬಯಲು ಮಾಡುತ್ತೇವೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ.
ಹಿರಿಯ ಕಾಂಗ್ರೆಸ್ ಮುಖಂಡರಾದ ವಿ.ಎಸ್.ಉಗ್ರಪ್ಪ ಮತ್ತು ಎಚ್.ಎಂ.ರೇವಣ್ಣ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಜನಪ್ರಿಯ, ಪ್ರಾಮಾಣಿಕ ಸರಕಾರವನ್ನು ಅಸ್ಥಿರಗೊಳಿಸಬೇಕು ಎನ್ನುವ ಇರಾದೆಯಿಂದ ಬಿಜೆಪಿ ಇಂತಹ ಷಡ್ಯಂತ್ರ ರೂಪಿಸಿದೆ ಎಂದು ಕಿಡಿಕಾರಿದರು.
ಕಳೆದ ನಾಲ್ಕು ವರ್ಷಗಳಿಂದ ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರರಹಿತ ಸರಕಾರ ನಡೆಸುತ್ತಿದ್ದಾರೆ. ಇದರಿಂದ ಕಂಗಾಲಾದ ಬಿಜೆಪಿ ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸರಕಾರದ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
2016ರ ಮಾರ್ಚ್ ತಿಂಗಳಲ್ಲಿಯೇ ಡೈರಿಯನ್ನು ಆದಾಯ ತೆರಿಗೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಹಾಗಿದ್ದಲ್ಲಿ ಐಟಿ ಅಧಿಕಾರಿಗಳು ಯಾಕೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಮತ್ತೊಬ್ಬ ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಎಂ.ರೇವಣ್ಣ, ನನ್ನ ಬಳಿಯೂ ಎರಡು ಡೈರಿಗಳಿವೆ. ಮುಂದಿನ ಕೆಲ ದಿನಗಳಲ್ಲಿ ಡೈರಿಯನ್ನು ಬಹಿರಂಗಪಡಿಸುತ್ತೇನೆ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.