Publish Date: Mon, 27 Nov 2023 (14:20 IST)
Updated Date: Mon, 27 Nov 2023 (14:28 IST)
ಕಾಂಗ್ರೆಸ್ ಪಕ್ಷದ ಐದನೇ ಗ್ಯಾರಂಟಿಯಾದ ಯುವ ನಿಧಿ ಯೋಜನೆ 2024ರ ಜನವರಿಯಲ್ಲಿ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ಭಾನುವಾರ ಪಾಲ್ಗೊಂಡಿದ್ದ ಅವರು, ಈ ವಿಷಯ ತಿಳಿಸಿದರು.
ಪದವಿ, ಡಿಪ್ಲೊಮಾ ಪಡೆದು ನಿರುದ್ಯೋಗಿಗಳಾಗಿರುವವರಿಗೆ ಯುವ ನಿಧಿ ಸಿಗಲಿದೆ. 2022-23ನೇ ಸಾಲಿನಲ್ಲಿ ಪದವಿ ಪಡೆದ ಯುವಜನರಿಗೆ ಎರಡು ವರ್ಷಗಳವರೆಗೆ ತಿಂಗಳಿಗೆ 3.000 ಹಾಗೂ ಡಿಪ್ಲೊಮಾ ಮಾಡಿದ ಯುವಜನರಿಗೆ ಎರಡು ವರ್ಷಗಳವರೆಗೆ ತಿಂಗಳಿಗೆ 1,500 ನೀಡಲಾಗುವುದು. ಇದಲ್ಲದೇ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನೂ ನೀಡಲಾಗುತ್ತದೆ ಎಂದರು. ಕಾಂಗ್ರೆಸ್ ತನ್ನ ಎಲ್ಲ ಭರವಸೆಗಳನ್ನೂ ಈಡೇರಿಸಿದೆ. ಕರ್ನಾಟಕದಲ್ಲಿದ್ದ ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದ ಶೇ.10ರಷ್ಟು ಭರವಸೆಗಳನ್ನಷ್ಟೇ ಈಡೇರಿಸಿತ್ತು.
ಕರ್ನಾಟಕದಲ್ಲಿ ನಡೆದ ಚುನಾವಣೆ ವೇಳೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿ ಯೋಜನೆ ಜಾರಿಯೇ ಆಗುವುದಿಲ್ಲ. ಈ ರೀತಿಯ ಘೋಷಣೆಯಿಂದ ರಾಜ್ಯದ ಆರ್ಥಿಕತೆ ಕುಂಠಿತವಾಗುತ್ತದೆ ಎಂದಿದ್ದರು. ಗ್ಯಾರಂಟಿಗಳನ್ನು ನಾವು ಜಾರಿ ಮಾಡಿದ ಬಳಿಕವೂ ರಾಜ್ಯದ ಆರ್ಥಿಕತೆ ಸದೃಢವಾಗಿದೆ ಎಂದರು.