Publish Date: Sat, 17 Jan 2026 (11:57 IST)
Updated Date: Sat, 17 Jan 2026 (11:59 IST)
ಬೆಂಗಳೂರು: ಒಂದೆಡೆ ನಾಯಕತ್ವ ವಿಚಾರವಾಗಿ ಹೈಕಮಾಂಡ್ ಜೊತೆ ಚರ್ಚಿಸಲು ಡಿಕೆ ಶಿವಕುಮಾರ್ ದೆಹಲಿಯಲ್ಲಿರುವಾಗಲೇ ಇತ್ತ ಸಿಎಂ ಬದಲಾವಣೆ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಮಹತ್ವದ ಹೇಳಿಕೆ ನೀಡಿದ್ದಾರೆ.
ಸಿಎಂ ಬದಲಾವಣೆ ವಿಚಾರ ಮತ್ತೊಮ್ಮೆ ಈಗ ಗರಿಗೆದರಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬಣ ತಮ್ಮ ನಾಯಕರ ಪರವಾಗಿ ಬ್ಯಾಟಿಂಗ್ ಆರಂಭಿಸಿದ್ದಾರೆ. ಇದರ ನಡುವೆ ಡಿಕೆ ಶಿವಕುಮಾರ್ ನಿನ್ನೆ ದೆಹಲಿಗೆ ಹೋಗಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿದ್ದಾರೆ.
ಡಿಕೆಶಿ ಹೈಕಮಾಂಡ್ ನಾಯಕರನ್ನು ಭೇಟಿಯಾದ ಬೆನ್ನಲ್ಲೇ ಅವರ ಬೆಂಬಲಿಗ ನಾಯಕರು ರಾಜ್ಯದಲ್ಲಿ ಫುಲ್ ಆಕ್ಟಿವ್ ಆಗಿದ್ದಾರೆ. ಡಿಕೆಶಿಗೆ ಮುಖ್ಯಮಂತ್ರಿ ಪಟ್ಟ ಸಿಗಬಹುದು ಎಂಬ ವಿಶ್ವಾಸದಲ್ಲಿದ್ದಾರೆ. ಈ ನಡುವೆ ಮಾಧ್ಯಮಗಳು ಜಮೀರ್ ಅಹ್ಮದ್ ರನ್ನು ಈ ಬಗ್ಗೆ ಪ್ರಶ್ನೆ ಮಾಡಿವೆ.
ಇದಕ್ಕೆ ಉತ್ತರಿಸಿರುವ ಅವರು ಸಿಎಂ ಬದಲಾವಣೆ ವಿಚಾರ ನಮ್ಮ ಕೈಯಲ್ಲಿಲ್ಲ. ಅದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ನವರು ಯಾರನ್ನೇ ಸಿಎಂ ಆಗಿ ಆಯ್ಕೆ ಮಾಡಿದರೂ ನಾವು ಒಪ್ಪುತ್ತೇವೆ ಎಂದು ಜಮೀರ್ ಅಹ್ಮದ್ ಹೇಳಿದ್ದಾರೆ.