Publish Date: Sat, 14 Aug 2021 (21:14 IST)
Updated Date: Sat, 14 Aug 2021 (21:19 IST)
ಬೆಂಗಳೂರು: ಝೀರೋ ಟ್ರಾಫಿಕ್ ನೀಡದಂತೆ ಸಿ.ಎಂ ಬೊಮ್ಮಾಯಿ ಪೊಲೀಸ್ ಇಲಾಖೆಗೆ ಈ ಹಿಂದೆ ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ತುರ್ತು ಹಾಗೂ ಅನಿವಾರ್ಯ ಸಂದರ್ಭಗಳಲ್ಲಿದ್ದಲ್ಲಿ ಮಾತ್ರ ಝೀರೋ ಟ್ರಾಫಿಕ್ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಿವಂತೆ ಜಂಟಿ ಸಂಚಾರ ಪೊಲೀಸ್ ಆಯುಕ್ತರಾದ ರವಿಕಾಂತೇಗೌಡ ನಗರದ ಟ್ರಾಫಿಕ್ ಪೊಲೀಸರಿಗೆ ಸೂಚಿಸಿ ಆದೇಶ ಹೊರಡಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾವು ಬೆಂಗಳೂರು ನಗರದಲ್ಲಿ ಸಂಚರಿಸುವ ವೇಳೆ ತಮ್ಮ ವಾಹನಕ್ಕೆ ಝೀರೋ ಟ್ರಾಫಿಕ್ ನೀಡಬಾರದು. ಇದರಿಂದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗುತ್ತದೆ, ಕೆಲವು ವೇಳೆ ತುರ್ತು ವಾಹನಗಳಾದ ಆಂಬ್ಯುಲೆನ್ಸ್, ಅಗ್ನಿಶಾಮಕದಳ ವಾಹನಗಳು ಸಿಲುಕುವುದರಿಂದ ತಮಗೆ ನೋವು ಮತ್ತು ಮುಜುಗರ ಉಂಟು ಮಾಡುತ್ತದೆ. ಈ ನಿಟ್ಟಿನಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಎಲ್ಲಾ ಸಂಚಾರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಮುಖ್ಯಮಂತ್ರಿಗಳು ಸಂಚರಿಸುವ ವೇಳೆಯಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆಯನ್ನು ರದ್ದುಗೊಳಿಸಿ ಆದೇಶಿಸಲಾಗಿದ್ದು, ಒಂದು ಜಂಕ್ಷನ್ನಿಂದ ಮತ್ತೊಂದು ಜಂಕ್ಷನ್ಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಮಾತ್ರ ಮುಖ್ಯಮಂತ್ರಿಗಳಿಗೆ ನೀಡುವಂತೆ ನಿರ್ದೇಶಿಸಲಾಗಿದೆ. ತುರ್ತು ಹಾಗೂ ಅನಿವಾರ್ಯ ಸಂದರ್ಭಗಳಲ್ಲಿದ್ದಲ್ಲಿ ಮಾತ್ರ ಝೀರೋ ಟ್ರಾಫಿಕ್ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಿಕೊಡುವಂತೆ ಸೂಚಿಸಲಾಗಿದೆ ಕಲ್ಪಿಸುವಂತೆ ಸೂಚಿಸಲಾಗಿದೆ ಎಂದು ಜಂಟಿ ಸಂಚಾರ ಆಯುಕ್ತ ಡಾ. ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ.