ಮೇವು ಹಗರಣದಲ್ಲಿ ಅಪರಾಧಿಯಾಗಿ ಐದು ವರ್ಷಗಳ ಶಿಕ್ಷೆ ಅನುಭವಿಸುತ್ತಿರುವ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದರಿಂದ ಅವರಿಗೆ ಜೈಲೇ ಗತಿಯಾಗಿದೆ.
ಮೇವು ಹಗರಣದ ತನಿಖೆ ಇನ್ನೂ ನಡೆಯುತ್ತಿರುವುದರಿಂದ ಜಾಮೀನು ನೀಡುವುದು ಸಾಧ್ಯವಿಲ್ಲ. ಆದ್ದರಿಂದ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಮೂರ್ತಿ ಆರ್ಆರ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
ಲಾಲು ಯಾದವ್ ಮತ್ತು ಮಾಜಿ ಸಂಸದ ಜಗದೀಶ್ ಶರ್ಮಾ ಅವರ ಜಾಮೀನು ಅರ್ಜಿಯ ಬಗ್ಗೆ ನಿನ್ನೆ ನ್ಯಾಯಾಲಯ ವಿಚಾರಣೆ ನಡೆಸಿ ಇಂದು ತೀರ್ಪು ಕಾಯ್ದಿರಿಸಿತ್ತು.
ಲಾಲು ಪ್ರಸಾದ್ ಯಾದವ್ ನೇತೃತ್ವದ ಆರ್ಜೆಡಿ ಸರಕಾರ ಅಧಿಕಾರದಲ್ಲಿದ್ದಾಗ 37.7 ಕೋಟಿ ರೂಪಾಯಿಗಳ ಮೇವು ಹಗರಣ ನಡೆದಿತ್ತು. ಹಗರಣದಲ್ಲಿ ಲಾಲು ಮತ್ತು ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಮಿಶ್ರಾ ಸೇರಿದಂತೆ 43 ಮಂದಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. ಅದರಲ್ಲಿ 30 ಮಂದಿ ಆರೋಪಿಗಳಿಗೆ ಶಿಕ್ಷೆ ಘೋಷಿಸಲಾಗಿದೆ.