ದೇಶದಲ್ಲಿ ಎದುರಾಗಿರುವ ಪ್ರತಿಯೊಂದು ಸಮಸ್ಯೆಗಳಿಗೆ ಕಾಂಗ್ರೆಸ್ ಪಕ್ಷವೇ ನೇರ ಹೊಣೆಯಾಗಿದೆ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಗುಡುಗಿದ್ದಾರೆ.
ಮಹಾರಾಷ್ಟ್ರದಲ್ಲಿ ಅಡಳಿತಪಕ್ಷವಾಗಿರುವ ಕಾಂಗ್ರೆಸ್ ಬಹುಕೋಟಿ ಆದರ್ಶ ಹಗರಣದ ವರದಿಯನ್ನು ತಿರಸ್ಕರಿಸಿದ ನಂತರವೂ ರಾಹುಲ್ ಗಾಂಧಿ ಭ್ರಷ್ಟಾಚಾರದ ಬಗ್ಗೆ ಮುಗ್ಧತೆಯನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ಮುಖಂಡರು ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿದ್ದರೂ ಮುಗ್ದತೆಯನ್ನು ತೋರುತ್ತಿದ್ದಾರೆ. ಮತ್ತೊಂದಂಡೆ ದೇಶವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಬೇಕು ಎಂದು ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ ಸಂಗತಿಯಾಗಿದೆ ಎಂದು ಕಿಡಿಕಾರಿದ್ದಾರೆ.
ದೇಶದಲ್ಲಿ ಎದುರಾದ ಹಣದುಬ್ಬರ ಮತ್ತು ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಪಕ್ಷದ ದುರಾಡಳಿತವೇ ಕಾರಣವಾಗಿದೆ.ದೇಶದ 90 ಜಿಲ್ಲೆಗಳಲ್ಲಿ ಮುಸ್ಲಿಮರು ಬಹುಸಂಖ್ಯಾತರಾಗಿದ್ದಾರೆ. ಪ್ರಧಾನಿ ಪ್ಯಾಕೇಜ್ಗಳನ್ನು ಘೋಷಿಸುತ್ತಾರೆ. ಸಂಸತ್ತಿನಲ್ಲಿ ಪ್ರಶ್ನಿಸಿದಲ್ಲಿ ಒಂದು ರೂಪಾಯಿ ಕೂಡಾ ವಿನಿಯೋಗಿಸಿಲ್ಲ ಎನ್ನುವ ಹೇಳಿಕೆ ನೀಡುತ್ತಾರೆ. ಇದು ಕಾಂಗ್ರೆಸ್ ಪಕ್ಷ ಓಟ್ ಬ್ಯಾಂಕ್ ನೀತಿಗಳನ್ನು ತೋರಿಸುತ್ತದೆ ಎಂದು ಲೇವಡಿ ಮಾಡಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಒಂದು ಪಕ್ಷಕ್ಕೆ ಮಾತ್ರ ಬಹುಮತ ನೀಡಿ ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಮತದಾರರು ಮತ ಚಲಾಯಿಸಬೇಕು ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.