ಉತ್ತರಾಖಂಡ ಮತ್ತೆ ಮೇಘಸ್ಫೋಟಕ್ಕೆ ತತ್ತರಿಸಿದ್ದು 33 ಜನರು ಮೃತಪಟ್ಟು, 50ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು ಮೂರು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಸ್ಥಳಕ್ಕೆ ಧಾವಿಸಿದೆ. ಕಳೆದ 48 ಗಂಟೆಗಳಲ್ಲಿ ಭಾರಿ ಮಳೆಯಾಗಿದ್ದು ಅಲಕಾನಂದ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಮಳೆ ಮುಂದುವೆರೆದಿರುವುದು ಎನ್ಡಿಆರ್ಎಫ್ ಹೆಲಿಕಾಪ್ಟರ್ ಕಾರ್ಯಾಚರಣೆಗೆ ಅಡ್ಡಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಅನೇಕರು ನೆಲಕ್ಕುರುಳಿರುವ ಮನೆಗಳ ಅವಶೇಷಗಳಡಿ ಸಿಲುಕಿ ಕೊಂಡಿರಬಹುದು, ಹಲವರು ಪ್ರವಾಹದಲ್ಲಿ ಕೊಚ್ಚಿ ಹೋಗಿರಬಹುದೆಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ ಭೀಕರ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮೊದಲೇ ಎಚ್ಚರಿಕೆ ನೀಡಿತ್ತು. ಆದರೆ ಮಳೆಯ ಅಬ್ಬರ ವ್ಯಾಪಕವಾಗಿದ್ದರಿಂದ ಅವಘಡವನ್ನು ತಡೆಯಲಾಗಿಲ್ಲ.
ಹಲವು ಗ್ರಾಮಗಳು ಜಲಾವೃತಗೊಂಡಿದ್ದು ಮಳೆ ಮತ್ತೆರಡು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಹರೀಶ್ ರಾವತ್ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
2013ರಲ್ಲಿ ರಾಜ್ಯದಲ್ಲಿ ಸಂಭವಿಸಿದ ಮೇಘಸ್ಪೋಟದಲ್ಲಿ 6000 ಜನರು ಮೃತರಾಗಿದ್ದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.