ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ, ಮೋದಿ ವಿರುದ್ಧ ಆರೋಪ ಮಾಡುವುದು ಬಿಟ್ಟು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಆಪ್ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಬಿಜೆಪಿ ತಿರುಗೇಟು ನೀಡಿದೆ.
ಕೇಜ್ರಿವಾಲ್ ಹೇಳಿಕೆಗಳು ನಾಚಿಕೆಗೇಡಿತನದ ಸಂಗತಿ. ಅದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಕೇಜ್ರಿವಾಲ್ ಮುಖವಾಡ ಕಳಚಿ ಬಿದ್ದಿದೆ. ಇದೀಗ ಭ್ರಷ್ಟರನ್ನು ರಕ್ಷಿಸಲು ಹೊರಟಿದ್ದಾರೆ. ಹಲವಾರು ಆಪ್ ಶಾಸಕರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಶ್ರೀಕಾಂತ್ ಶರ್ಮಾ ಕಿಡಿಕಾರಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಕಾನೂನು ವ್ಯವಸ್ಥೆಯಿರುತ್ತದೆ ಎನ್ನುವುದು ಕೇಜ್ರಿವಾಲ್ಗೆ ಗೊತ್ತಿರಬೇಕು. ಒಂದು ವೇಳೆ ಯಾರಾದರೂ ಕಾನೂನು ಉಲ್ಲಂಘಿಸಿದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ಗೆ ಆಪ್ ಪಕ್ಷದಲ್ಲಿ ನಡೆಯುತ್ತಿರುವ ಅಂತರಿಕ ಬೆಳವಣಿಗೆಗಳು ಅಸಮಾಧಾನ ಮೂಡಿಸಿವೆಯೇ ಹೊರತು ಪ್ರಧಾನಿ ಮೋದಿಯಿಂದಲ್ಲ. ಆಪ್ ಶಾಸಕರ ವಿರುದ್ಧ ದೆಹಲಿ ಪೊಲೀಸರು ಕ್ರಿಮಿನಲ್ ಕೇಸ್ಗಳನ್ನು ದಾಖಲಿಸುತ್ತಿರುವುದು ಅವರಿಗೆ ಸಂಕಷ್ಟ ತಂದಿದೆ ಎಂದು ಲೇವಡಿ ಮಾಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇನ್ನೊಬ್ಬರ ಮೇಲೆ ಆರೋಪಗಳನ್ನು ಹೊರಿಸುವುದು ಬಿಟ್ಟು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಆಪ್ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಶರ್ಮಾ ಸಲಹೆ ನೀಡಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.