Publish Date: Tue, 08 Feb 2022 (13:01 IST)
Updated Date: Tue, 08 Feb 2022 (19:04 IST)
ಭೋಪಾಲ್ : ಕರ್ನಾಟಕದಲ್ಲಿ ಭುಗಿಲೆದ್ದ ಹಿಜಬ್-ಕೇಸರಿ ಶಾಲು ವಿವಾದವು ಈಗ ದೇಶದ ಇತರೆ ರಾಜ್ಯಗಳಲ್ಲೂ ಚರ್ಚೆಗೆ ಗ್ರಾಸವಾಗಿದೆ.
ಹಿಜಬ್ ಸಮವಸ್ತ್ರದ ಭಾಗವಲ್ಲ. ಮಧ್ಯಪ್ರದೇಶ ರಾಜ್ಯದ ಶಾಲೆಗಳಲ್ಲಿ ಅದನ್ನು ನಿಷೇಧಿಸಬೇಕು ಎಂದು ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮರ್ ಪ್ರತಿಕ್ರಿಯಿಸಿದ್ದಾರೆ.
ಶಾಲಾ ವಿದ್ಯಾರ್ಥಿಗಳಲ್ಲಿ ಸಮಾನತೆ ಮತ್ತು ಶಿಸ್ತನ್ನು ರೂಢಿಸುವ ಉದ್ದೇಶದಿಂದ ಕಟ್ಟುನಿಟ್ಟಿನ ಸಮವಸ್ತ್ರ ನಿಯಮವನ್ನು ರಾಜ್ಯ ಸರ್ಕಾರ ಅಳವಡಿಸಲಿದೆ. ಮುಂದಿನ ಅಧಿವೇಶನದಲ್ಲಿ ಸಮವಸ್ತ್ರಕ್ಕೆ ಸಂಬಂಧಿಸಿದಂತೆ ನಿಯಮಗಳನ್ನು ಹೊರಡಿಸಲಾಗುವುದು. ಹಿಜಬ್, ಸಮವಸ್ತ್ರದ ಭಾಗವಲ್ಲ.
ಹೀಗಾಗಿ ರಾಜ್ಯದ ಶಾಲೆಗಳಲ್ಲಿ ಅದನ್ನು ನಿಷೇಧಿಸಲಾಗುವುದು. ಈ ಬಗ್ಗೆ ಪರಿಶೀಲನೆ ನಡೆಸಿದ ನಂತರ ಕಟ್ಟುನಿಟ್ಟಿನ ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರಸ್ತುತ ಶಿಕ್ಷಣ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನಗಳು ದೇಶದಲ್ಲಿ ನಡೆಯುತ್ತಿವೆ. ಭಾರತದಲ್ಲಿ ಜನರು ಮನೆಯಲ್ಲಿ ವಿಭಿನ್ನ ಸಂಪ್ರದಾಯಗಳನ್ನು ಅನುಸರಿಸುತ್ತಾರೆ. ಆದರೆ ಶಾಲೆಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ನಿಯಮವನ್ನು ಅನುಸರಿಸಬೇಕು. ಕೆಲವರು ಉದ್ದೇಶಪೂರ್ವಕವಾಗಿ ದೇಶದ ವಾತಾವರಣವನ್ನು ಹಾಳು ಮಾಡಲು ಯತ್ನಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.