Publish Date: Tue, 02 Jan 2018 (20:39 IST)
Updated Date: Tue, 02 Jan 2018 (20:40 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲುವು ಸಾಧಿಸುವ ಮೂಲಕ ಕರ್ನಾಟಕದಲ್ಲಿ ಬಿಜೆಪಿ ಅರಳಿಸಲು ಮುಂದಾಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯ ಬಿಜೆಪಿ ಘಟಕದೊಳಗೆ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಹದ್ದಿನ ಕಣ್ಣಿಟ್ಟಿದ್ದು ಪ್ರತಿದಿನದ ಚಟುವಟಿಕೆಯ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.
ಪ್ರತಿದಿನದ ಮಾಹಿತಿ ಸಂಗ್ರಹಿಸಲು ಅಮಿತ್ ಶಾ ಅವರು ತಮ್ಮ ಪರಮಾಪ್ತ ಸಿಬ್ಬಂದಿಯೊಬ್ಬರನ್ನು ಬಿಜೆಪಿ ಕಚೇರಿಯಲ್ಲಿ ನೇಮಿಸಿದ್ದಾರೆ. ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯ ವಿವರಗಳನ್ನು ಮಾಹಿತಿ ಪಡೆದುಕೊಂಡಿರು ಅಮಿತ್ ಶಾ ಅವರು ವಿಧಾನಸಭೆ ಚುನಾವಣೆ ಮುಗಿಯುವವರೆಗೂ ರಾಜ್ಯ ಘಟಕದೊಳಗೆ ನಡೆಯುವ ಎಲ್ಲ ವಿದ್ಯಮಾನಗಳನ್ನು ಇ-ಮೇಲ್, ಸಾಮಾಜಿಕ ಜಾಲತಾಣದ ಮೂಲಕ ನೀಡುವಂತೆ ಸೂಚಿಸಿದ್ದಾರೆ.
ವಾರದಲ್ಲಿ ಕನಿಷ್ಠ ಮೂರರಿಂದ ನಾಲ್ಕು ಬಾರಿ ಸರಣಿ ಸಭೆ ನಡೆಸಬೇಕು. ರಾಜ್ಯ ಉಸ್ತುವಾರಿ, ಸಹ ಉಸ್ತುವಾರಿ, ಚುನಾವಣಾ ಉಸ್ತುವಾರಿ ಹಾಗೂ ಕೇಂದ್ರ ಸಚಿವರು, ಕೋರ್ ಕಮಿಟಿ ಸದಸ್ಯರು, ಪದಾಧಿಕಾರಿಗಳು ಕಡ್ಡಾಯವಾಗಿ ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಭಿನ್ನಮತಕ್ಕೆ ಅವಕಾಶ ನೀಡದಂತೆ ಹೈಕಮಾಂಡ್ ಪಕ್ಷವನ್ನೇ ಹಿಡಿತಕ್ಕೆ ತೆಗೆದುಕೊಂಡಿದೆ. ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು ಎಲ್ಲ ವಿಚಾರಗಳನ್ನು ಹೈಕಮಾಂಡ್ ಮಟ್ಟದಲ್ಲೇ ತೀರ್ಮಾನಿಸಲಾಗುತ್ತದೆ ಎಂದು ಹೇಳಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.