Publish Date: Thu, 05 Jan 2023 (10:31 IST)
Updated Date: Thu, 05 Jan 2023 (10:02 IST)
ಅಮರಾವತಿ : ಸಾರ್ವಜನಿಕ ಸುರಕ್ಷತೆಯ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸರ್ಕಾರವು ಹೆದ್ದಾರಿ ಸೇರಿದಂತೆ ರಸ್ತೆಗಳಲ್ಲಿ ಸಾರ್ವಜನಿಕ ಸಭೆಗಳನ್ನು ಹಾಗೂ ರ್ಯಾಲಿಗಳನ್ನು ನಡೆಸುವುದನ್ನು ನಿಷೇಧಿಸಿದೆ.
ಕಳೆದ ವಾರ ಕಂದುಕೂರಿನಲ್ಲಿ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ನಡೆಸಿದ್ದ ರ್ಯಾಲಿ ವೇಳೆ ನೂಕುನುಗ್ಗಲು ಉಂಟಾಗಿತ್ತು. ಈ ವೇಳೆ ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ್ದರು. ಈ ಬೆನ್ನಲ್ಲೇ ಆಂಧ್ರ ಸರ್ಕಾರ ನಿಷೇಧಾಜ್ಞೆಯನ್ನು ಜಾರಿಗೆ ತಂದಿದೆ.
ಈ ಬಗ್ಗೆ ರಾಜ್ಯ ಗೃಹ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಹರೀಶ್ ಕುಮಾರ್ ಗುಪ್ತಾ ಮಾತನಾಡಿ, ಸಾರ್ವಜನಿಕ ಸಂಚಾರ, ತುರ್ತು ಸೇವೆ, ಅಗತ್ಯ ವಸ್ತುಗಳ ಚಲನೆಗೆ ಅಡ್ಡಿಯಾಗದ ರೀತಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಲು ಆಯಾ ಜಿಲ್ಲಾಡಳಿತ ಹಾಗೂ ಪೊಲೀಸರು ಅನುವು ಮಾಡಿಕೊಡಬೇಕು ಎಂದು ತಿಳಿಸಿದರು.
ಅಧಿಕಾರಿಗಳು ರಸ್ತೆಗಳಲ್ಲಿ ಸಭೆಗಳಿಗೆ ಅನುಮತಿ ನೀಡುವುದನ್ನು ತಪ್ಪಿಸಬೇಕು. ಅಪರೂಪದ ಸಂದರ್ಭದಲ್ಲಿ ಮಾತ್ರ ಸಾರ್ವಜನಿಕ ಸಭೆಗಳಿಗೆ ಅನುಮತಿಯನ್ನು ನೀಡಬೇಕು ಎಂದು ಸೂಚಿಸಿದರು.