ಪ್ರಧಾನಮಂತ್ರಿ ನರೇಂದ್ರ ಮೋದಿ ಲಲಿತ್ಗೇಟ್ ಮತ್ತು ವ್ಯಾಪಂ ಹಗರಣದ ಬಗ್ಗೆ ಮೌನ ತಳೆದು ವಿಪಕ್ಷಗಳು ಅಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿನ ಹಗರಣಗಳನ್ನು ಎತ್ತುವ ಮೂಲಕ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಕಳೆದ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಭ್ರಷ್ಟಾಚಾರ ಮುಕ್ತ ಸರಕಾರ ನೀಡುವುದಾಗಿ ವಾಗ್ದಾನ ಮಾಡಿದ್ದ ಮೋದಿ ಇದೀಗ ಭ್ರಷ್ಟಾಚಾರಿಗಳಿಗೆ ಮಣೆಹಾಕುತ್ತಿದ್ದಾರೆ ಎಂದು ಗುಡುಗಿದರು.
ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್, ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಮತ್ತು ಶಿವರಾಜ್ ಸಿಂಗ್ ಚೌಹಾನ್ ಅವರನ್ನು ವಜಾಗೊಳಿಸುವವರೆಗೆ ಸಂಸತ್ತಿನ ಕಲಾಪ ನಡೆಯಲು ಬಿಡುವುದಿಲ್ಲ ಎಂದು ರಾಹುಲ್ ಘೋಷಿಸಿದರು.
ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಮಾಜಿ ಐಪಿಎಲ್ ಆಯುಕ್ತ ಲಲಿತ್ಮೋದಿಗೆ ರಹಸ್ಯವಾಗಿ ನೆರವಾಗಿದ್ದಲ್ಲದೇ ಅವರೊಂದಿಗೆ ವಹಿವಾಟು ನಡೆಸುತ್ತಿರುವುದು ಬಹಿರಂಗವಾಗಿದೆ.
ಪ್ರಧಾನಮಂತ್ರಿ ಮೋದಿ ಕೂಡಲೇ ಸಚಿವೆ ಸುಷ್ಮಾ ಮತ್ತು ಇಬ್ಬರು ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯಬೇಕು ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಒತ್ತಾಯಿಸಿದರು.