Publish Date: Wed, 05 Jun 2024 (16:08 IST)
Updated Date: Wed, 05 Jun 2024 (16:14 IST)
ಮುಂಬೈ: ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರ ರಾಜ್ಯದಲ್ಲಿ ಬಿಜೆಪಿಯು ಕಳಪೆ ಪ್ರದರ್ಶನ ತೋರಿರುವ ಹೊಣೆಹೊತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ರಾಜೀನಾಮೆಗೆ ಮುಂದಾಗಿದ್ದಾರೆ.
ಒಟ್ಟು 48 ಕ್ಷೇತ್ರಗಳಲ್ಲಿ ಬಿಜೆಪಿಯು ಕೇವಲ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾರಣ ಉಪ ಮುಖ್ಯಮಂತ್ರಿ ಜವಾಬ್ದಾರಿಯಿಂದ ನಿಯುಕ್ತಿಗೊಳಿಸಿ ಎಂದು ಬಿಜೆಪಿ ಹೈಕಮಾಂಡ್ಗೆ ದೇವೇಂದ್ರ ಫಡ್ನವೀಸ್ ಅವರು ಮನವಿ ಮಾಡಿದ್ದಾರೆ.
ಇಂದು ಫಡ್ನವೀಸ್ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಇನ್ನಷ್ಟು ಬಲಿಷ್ಠವಾಗಲು ನಾನು ಸಂಘಟನೆ ಮಟ್ಟದಲ್ಲಿ ಕೆಲಸ ಮಾಡಲು ಇಚ್ಛಿಸುತ್ತೇನೆ ಎಂದು ಹೇಳಿದರು.
ಪಕ್ಷದ ಸಂಘಟನೆಗೆ ನನ್ನ ಆದ್ಯತೆ ಇರಲಿದೆ. ಪೂರ್ಣಪ್ರಮಾಣದಲ್ಲಿ ಪಕ್ಷ ಸಂಘಟನೆ ಮಾಡುತ್ತೇನೆ. ಹಾಗಾಗಿ, ಉಪ ಮುಖ್ಯಮಂತ್ರಿ ಹುದ್ದೆಯಿಂದ ನಿಯುಕ್ತಿಗೊಳಿಸಿ ಎಂಬುದಾಗಿ ಬಿಜೆಪಿ ಹೈಕಮಾಂಡ್ಗೆ ಮನವಿ ಮಾಡುತ್ತೇನೆ ಎಂಬುದಾಗಿ ತಿಳಿಸಿದ್ದಾರೆ.
2019ರ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಯು ಒಟ್ಟು 48 ಕ್ಷೇತ್ರಗಳ ಪೈಕಿ 23 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ, ಬಿಜೆಪಿಯು ಈ ಬಾರಿ 9 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ) ಹಾಗೂ ಎನ್ಸಿಪಿ (ಶರದ್ ಪವಾರ್) ಅವರ ಮಹಾ ವಿಕಾಸ್ ಅಘಾಡಿಯು ಈ ಬಾರಿ 30 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ ನೇತೃತ್ವದ ಎನ್ಡಿಎಯು ರಾಜ್ಯದಲ್ಲಿ 17 ಕ್ಷೇತ್ರಗಳಲ್ಲಿ ಮಾತ್ರ ಜಯಭೇರಿ ಬಾರಿಸಿದೆ