Publish Date: Tue, 10 Oct 2017 (18:58 IST)
Updated Date: Tue, 10 Oct 2017 (19:01 IST)
ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಲೋಕಸಭೆ ಕ್ಷೇತ್ರಗಳಾದ ರಾಯಬರೇಲಿ ಮತ್ತು ಅಮೇಥಿಗೆ ಪ್ರತಿ ವಾರ ಬಿಜೆಪಿಯ ಫೈರ್ಬ್ರ್ಯಾಂಡ್ ನಾಯಕರನ್ನು ಕಳುಹಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ.
ಸೋನಿಯಾ ರಾಹುಲ್ ಭದ್ರಕೋಟೆಗೆ ಲಗ್ಗೆ ಹಾಕಿದಲ್ಲಿ ಉಭಯ ನಾಯಕರಿಗೆ ದೇಶದ ಇತರ ಭಾಗಗಳಲ್ಲಿ ಪ್ರವಾಸ ಮಾಡಲು ಕಷ್ಟವಾಗುವುದಲ್ಲದೇ ತಮ್ಮ ಕ್ಷೇತ್ರದ ಬಗ್ಗೆ ಹೆಚ್ಚಿನ ಗಮನಹರಿಸಬೇಕಾಗುತ್ತದೆ ಎನ್ನುವ ಉದ್ದೇಶ ಬಿಜೆಪಿ ಹೊಂದಿದೆ ಎನ್ನಲಾಗುತ್ತಿದೆ.
ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ, ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ, ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರತಿವಾರ ಬಿಜೆಪಿಯ ಫೈರ್ಬ್ರ್ಯಾಂಡ್ ನಾಯಕರು ರಾಯಬರೇಲಿ ಮತ್ತು ಅಮೇಥಿಗೆ ಆಗಮಿಸಿ ಕಾಂಗ್ರೆಸ್ ವಿರುದ್ಧ ಭಾಷಣ ಮಾಡಲಿದ್ದಾರೆ. ಸೋನಿಯಾ ಮತ್ತು ರಾಹುಲ್ ತಮ್ಮ ಕ್ಷೇತ್ರವನ್ನೇ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ವೈಯಕ್ತಿಕ ವಿಷಯಗಳ ಬಗ್ಗೆ ದಾಳಿ ನಡೆಸಿದ ಅಮಿತ್ ಶಾ, ಕಳೆದ ಮೂರು ತಲೆಮಾರುಗಳಿಂದ ನಿಮ್ಮ ಕುಟುಂಬದ ಸದಸ್ಯರು ಆಯ್ಕೆಯಾಗುತ್ತಿದ್ದಾರೆ. ಪ್ರಸ್ತುತ ಸರಕಾರವನ್ನು ಟೀಕಿಸುವ ನೀವು ನಿಮ್ಮ ಅಜ್ಜ, ಅಜ್ಜಿ, ತಾಯಿ ಮತ್ತು ತಂದೆಗೆ ಯಾಕೆ ಅಭಿವೃದ್ಧಿ ಮಾಡಿಲ್ಲವೆನ್ನುವ ಪ್ರಶ್ನೆ ಹಾಕಬೇಕಾಗಿತ್ತು ಎಂದು ವ್ಯಂಗ್ಯವಾಡಿದ್ದಾರೆ.
ಸಾಮಾನ್ಯ ಜನರ ಸಮಸ್ಯೆಗಳನ್ನು ಗಾಂಧಿ ಕುಟುಂಬದವರು ಯಾವತ್ತೂ ಕೇಳಲಿಲ್ಲ. ಸೋನಿಯಾ ಮತ್ತು ರಾಹುಲ್ ಜನರ ಸಮಸ್ಯೆಗಳನ್ನು ಕೇಳುವುದಿಲ್ಲ, ಅವರು ದೇಶದಾದ್ಯಂತ ಪ್ರವಾಸ ಮಾಡುತ್ತಾರೆ ಆದರೆ, ಅಮೇಥಿ ಬಗ್ಗೆ ಮಾತನಾಡುತ್ತಾರೆ ಎಂದು ಲೇವಡಿ ಮಾಡಿದ್ದಾರೆ.
ಗುಜರಾತ್ ಪ್ರವಾಸದಲ್ಲಿರುವ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿ ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರ ಕೇವಲ ಎರಡು ಅಥವಾ ಮೂರು ಉದ್ಯಮಿಗಳಿಗಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸುತ್ತಿರುವ ಸಂದರ್ಭದಲ್ಲಿಯೇ ಬಿಜೆಪಿ ಮುಖಂಡರು ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.