ಕೇಂದ್ರದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ತಮ್ಮ ಬೇಡಿಕೆಗಳನ್ನು ಸದನದ ಮುಂದಿಡುವ ಸಲುವಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಇಂದು ಸಂಸದೀಯ ಸಭೆ ಕರೆದಿದ್ದಾರೆ.
ಸಭೆಯಲ್ಲಿ ಪಕ್ಷದ ಲೋಕಸಭಾ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹಾಗೂ ರಾಜ್ಯ ಸಭಾ ನಾಯಕ ಆನಂದ್ ಶರ್ಮಾ ಸೇರಿದಂತೆ ಹಲವು ಸಂಸದೀಯ ನಾಯಕರು ಪಾಲ್ಗೊಂಡಿದ್ದು, ಸೋನಿಯಾಗಾಂಧಿ ಅವರು ಸಭೆಯ ನೇತೃತ್ವ ವಹಿಸಿದ್ದಾರೆ.
ಇನ್ನು ಶಭೆಯಲ್ಲಿ ಪ್ರತಿಕ್ರಿಯಿಸಿರುವ ಸೋನಿಯಾ, ಪ್ರಧಾನಿ ಮೋದಿ ಅವರ ವಿರುದ್ಧ ಹರಿಹಾಯ್ದಿದ್ದು, ರಾಷ್ಟ್ರದ ಅಭಿವೃದ್ಧಿಗಾಗಿ ನೂತನ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇನೆ ಎನ್ನುತ್ತಿರುವ ಪ್ರಧಾನಿಗಳು, ತಮ್ಮ ಪಕ್ಷದ ನಾಯಕರಿಂದ ಆಗುತ್ತಿರುವ ಭ್ರಷ್ಟಾಚಾರ ವಿಷಯಗಳ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ, ಮಹಾರಾಷ್ಟ್ರದ ಅತಿದೊಡ್ಡ ಭ್ರಷ್ಟಾಚಾರ ಹಗರಣದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್, ಲಲಿತ್ ಮೋದಿ ವಿಸಾ ಹಗರಣದಲ್ಲಿ ಭಾಗಿಯಾಗಿರುವ ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ರಾಜೇ ಹಾಗೂ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರು ರಾಜೀನಾಮೆ ನೀಡಬೇಕು. ಅಲ್ಲಿವರೆಗೆ ತಮ್ಮ ಹೋರಾಟವನ್ನು ಸದನದಲ್ಲಿ ಮುಂದುವರಿಸಬೇಕು ಎಂದು ತಿಳಿಸಿದ ಅವರು, ನಮ್ಮ ಬೇಡಿಕೆ ಈಡೇರುವವರೆಗೆ ಸದನವನ್ನು ನಡೆಯಲು ಬಿಡುವುದಿಲ್ಲ ಎಂದರು.
ಇನ್ನು ಈ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ್ ಖರ್ಗೆ, ಸದನ ನಡೆಸುವುದು ಬಿಡುವುದು ಆಡಳಿತ ಪಕ್ಷಕ್ಕೆ ಬಿಟ್ಟಿದ್ದಾಗಿದೆ. ಆದರೆ ಕಳಂಕಿತರನ್ನು ಕೈ ಬಿಡುವಂತೆ ನಿರಂತರವಾಗಿ ಸರ್ಕಾರವನ್ನು ಒತ್ತಾಯಿಸಲಿದ್ದೇವೆ ಎಂದರು.