Publish Date: Thu, 25 Apr 2024 (16:21 IST)
Updated Date: Thu, 25 Apr 2024 (16:23 IST)
ನವದೆಹಲಿ: ಪ್ರಧಾನಿ ಮೋದಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿಯಲ್ಲಿ ನೀಡಿದ ದೂರಿನ ಅನ್ವಯ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಚುನಾವಣಾ ಆಯೋಗವು ನೋಟಿಸ್ ಜಾರಿ ಮಾಡಿದೆ.
ಚುನಾವಣಾ ಭಾಷಣದ ವೇಳೆ ಜನರ ಸಂಪತ್ತನ್ನು ಮುಸ್ಲಿಮರಿಗೆ ಹಂಚಿಕೆ ಮಾಡಬೇಕು ಎಂದು ಕಾಂಗ್ರೆಸ್ ಬಯಸಿದೆ. ಮಹಿಳೆಯರ ಮಂಗಳಸೂತ್ರವನ್ನೂ ಕಾಂಗ್ರೆಸ್ ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು. ಇವರ ಹೇಳಿಕೆಗೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ಅದಲ್ಲದೆ ಅವರ ಹೇಳಿಕೆ ವಿರೋಧಿಸಿ ದೂರುಗಳು ದಾಖಲಾಗಿದ್ದವು.
ಯಾವುದೇ ಪ್ರಧಾನಿಯ ವಿರುದ್ಧ ಸಲ್ಲಿಸಲಾದ ದೂರನ್ನು ಚುನಾವಣಾ ಆಯೋಗವು ಪರಿಗಣಿಸಿರುವುದು ಇದೇ ಮೊದಲು ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದರ ಜೊತೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಚುನಾವಣಾ ಆಯೋಗ ನೋಟಿಸ್ ನೀಡಿದ್ದು, ತಾವು ಹಾಗೂ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಬಗ್ಗೆ ಸ್ಪಷ್ಟನೆ ಕೇಳಿದೆ.
ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್, ಸಿಪಿಐ, ಸಿಪಿಐ(ಎಂಎಲ್) ಹಾಗೂ ನಾಗರಿಕ ಸೇವಾ ಸಂಸ್ಥೆಗಳು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದವು.
ಈ ಬಗ್ಗೆ ಸೋಮವಾರದೊಳಗೆ ಸ್ಪಷ್ಟನೆ ನೀಡಬೇಕು ಎಂದು ನಡ್ಡಾ ಅವರಿಗೆ ನೀಡಿದ ನೋಟಿಸ್ನಲ್ಲಿ ಸೂಚಿಸಲಾಗಿದೆ.