Publish Date: Fri, 07 Apr 2023 (08:28 IST)
Updated Date: Fri, 07 Apr 2023 (09:21 IST)
-
ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆಪ್ ಮಾಜಿ ಸಚಿವ ಸತ್ಯೇಂದರ್ ಜೈನ್ಗೆ ದೆಹಲಿ ಹೈಕೋರ್ಟ್ ಗುರುವಾರ ಜಾಮೀನು ನಿರಾಕರಿಸಿದೆ.
ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನ ಜಾಮೀನು ಅರ್ಜಿಯನ್ನು ಹೈಕೋರ್ಟ್ ನ್ಯಾಯಾಧೀಶ ದಿನೇಶ್ ಕುಮಾರ್ ಶರ್ಮ ವಜಾಗೊಳಿಸಿದ್ದಾರೆ. ಇವರೊಂದಿಗೆ ಆರೋಪಿಗಳಾದ ವೈಭವ್ ಜೈನ್ ಮತ್ತು ಅಂಕುಶ್ ಜೈನ್ ಅವರಿಗೂ ಜಾಮೀನು ನಿರಾಕರಿಸಿದೆ.
ಈ ಮೂವರು ಆರೋಪಿಗಳು ನ್ಯಾಯಾಲಯ ವಿಧಿಸಿದ ಎರಡು ಷರತ್ತುಗಳನ್ನು ಪೂರೈಸುವಲ್ಲಿ ವಿಫಲರಾಗಿದ್ದಾರೆ. ಅವರು ಪ್ರಭಾವಿ ವ್ಯಕ್ತಿಯಾಗಿದ್ದು, ಜಾಮೀನು ನೀಡಿದರೆ ಸಾಕ್ಷ್ಯ ನಾಶಮಾಡಬಹುದು ಎಂದು ನ್ಯಾಯಾಲಯ ಹೇಳಿದೆ.
ನಾಲ್ಕು ಕಂಪನಿಗಳ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದಡಿ 2022ರ ಮೇ 30ರಂದು ಸತ್ಯೇಂದರ್ ಜೈನ್ ಅವರನ್ನು ಬಂಧಿಸಲಾಯಿತು. ಅದೇ ವರ್ಷ ನವೆಂಬರ್ 17ರಲ್ಲಿ ವಿಚಾರಣಾ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಬಳಿಕ ಸತ್ಯೇಂದರ್ ಜೈನ್ ಹೈಕೋರ್ಟ್ ಮೊರೆ ಹೋಗಿದ್ದರು.
ಸಿಬಿಐ 2017ರ ಆಗಸ್ಟ್ನಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಒಂದು ವರ್ಷದ ಬಳಿಕ ಸತ್ಯೇಂದರ್ ಜೈನ್, ಅವರ ಪತ್ನಿ ಮತ್ತು ಅವರ ನಾಲ್ವರು ಸಹಚರರ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಿದೆ.