Publish Date: Mon, 27 Feb 2023 (13:24 IST)
Updated Date: Mon, 27 Feb 2023 (14:38 IST)
ಶ್ರೀನಗರ : ಉಗ್ರರ ಗುಂಡಿನ ದಾಳಿಗೆ ಕಾಶ್ಮೀರಿ ಪಂಡಿತ್ ಸಾವನ್ನಪ್ಪಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದಿದೆ.
ಸಂಜಯ್ ಶರ್ಮಾ (40) ಮಾರುಕಟ್ಟೆಗೆ ತೆರಳುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು. ಸಂಜಯ್ ಶರ್ಮಾ ಅವರು ಜಮ್ಮು ಮತ್ತು ಕಾಶ್ಮೀರದ ಬ್ಯಾಂಕ್ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.
ಈ ಬಗ್ಗೆ ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದು, ಉಗ್ರರ ದಾಳಿಯಲ್ಲಿ ಹಿಂದೂ ವ್ಯಕ್ತಿಯೊಬ್ಬ ಸಾವನ್ನಪ್ಪಿರುವುದನ್ನು ಸ್ಪಷ್ಟಪಡಿಸಿದ್ದಾರೆ.
ಕಳೆದ ನಾಲ್ಕು ತಿಂಗಳಲ್ಲಿ ಹಿಂದೂ ನಾಗರಿಕರ ಮೇಲೆ ನಡೆದ ಮೊದಲ ದಾಳಿ ಇದಾಗಿದೆ. ಕಳೆದ ವರ್ಷ ಕಾಶ್ಮೀರಿ ಪಂಡಿತರು ಮತ್ತು ಸ್ಥಳೀಯರಲ್ಲದವರ ಮೇಲೆ ಸರಣಿ ಉದ್ದೇಶಿತ ದಾಳಿಗಳು ನಡೆದಿವೆ.