ಹಣಕಾಸು ಸಚಿವ ಅರುಣ್ ಜೇಟ್ಲಿ ತಮ್ಮ ವಿರುದ್ಧ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದು ಪಡಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ಇತರ ಐವರು ನಾಯಕರು ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಜತೆಗೆ ಮೊಕದ್ದಮೆಗೆ ಉತ್ತರ ನೀಡಲು ಹೆಚ್ಚಿನ ಸಮಯವನ್ನು ಸಹ ಕೇಳಿದ್ದಾರೆ.
ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ)ಯಲ್ಲಿ ಜೇಟ್ಲಿ ಅವರು ಭಾರಿ ಹಗರಣ ನಡೆಸಿದ್ದಾರೆ ಎಂದು ಕೇಜ್ರಿವಾಲ್ ಹಾಗೂ ಎಎಪಿ ನಾಯಕರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದ ಜೇಟ್ಲಿ, 10 ಕೋಟಿ ರುಪಾಯಿ ಪರಿಹಾರ ಕೋರಿದ್ದರು.
ಅರವಿಂದ್ ಕೇಜ್ರಿವಾಲ್, ಕುಮಾರ್ ವಿಶ್ವಾಸ್, ರಾಘವ್ ಚಢ, ಆಶುತೋಷ್, ಸಂಜಯ್ ಸಿಂಗ್ ಹಾಗೂ ದೀಪಕ್ ಬಾಜ್ಪೇಯಿ ಅವರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರುವರಿ 5ರೊಳಗೆ ಉತ್ತರಿಸುವಂತೆ ಹೈಕೋರ್ಟ್ ಸೂಚಿಸಿತ್ತು.