Publish Date: Tue, 16 Sep 2025 (17:37 IST)
Updated Date: Tue, 16 Sep 2025 (17:42 IST)
ನವದೆಹಲಿ: ಕೆಆರ್ಎಸ್ ಹಿನ್ನೀರಿನಲ್ಲಿ ವಾಟರ್ ಸ್ಪೋರ್ಟ್ಸ್, ಜಲ ವಿಮಾನಯಾನ (ಸೀ ಪ್ಲೇನ್) ಕ್ರೀಡೆ ಆಯೋಜಿಸಲು ಅನುಮೋದನೆ ನೀಡುವಂತೆ ಕೋರಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು, ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಈ ವಿಚಾರವನ್ನು ಕುಮಾರಸ್ವಾಮಿ ಅವರು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ರಾಮಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಮುಖ ವಿಮಾನಯಾನ ಯೋಜನೆಗಳ ಕುರಿತು ಚರ್ಚೆ ನಡೆಸಿದ್ದೇನೆ.
ಜತೆಗೆ, ದಸರಾ ಸಮಯದಲ್ಲಿ ಕೆಆರ್ಎಸ್ ಹಿನ್ನೀರಿನಲ್ಲಿ ವಾಟರ್ ಸ್ಪೋರ್ಟ್ಸ್, ಜಲ ವಿಮಾನಯಾನ (ಸೀ ಪ್ಲೇನ್) ಕ್ರೀಡೆಗಳನ್ನು ಆಯೋಜಿಸಲು ಅನುಮೋದನೆ ಕೋರಿ ಮನವಿ ಪತ್ರ ಸಲ್ಲಿಸಿದ್ದೇನೆ ಎಂದರು.
ವಾಟರ್ ಸ್ಪೋರ್ಟ್ಸ್, ಜಲ ವಿಮಾನಯಾನ ಕ್ರೀಡೆಗಳು ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದು ಅವರು ತಿಳಿಸಿದ್ದಾರೆ.
ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸಲು ಹಾಸನ ವಿಮಾನ ನಿಲ್ದಾಣದ ಕಾಮಗಾರಿಗಳನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದೇನೆ. ಜತೆಗೆ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ಯೋಜನೆಯ ಪ್ರಗತಿಯ ಬಗ್ಗೆಯೂ ನಾಯ್ಡು ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಎಚ್ಡಿಕೆ ಮಾಹಿತಿ ಹಂಚಿಕೊಂಡಿದ್ದಾರೆ.