Publish Date: Tue, 18 Apr 2023 (10:29 IST)
Updated Date: Tue, 18 Apr 2023 (10:17 IST)
ನವದೆಹಲಿ : ಏಪ್ರಿಲ್ 18 ವರೆಗೂ ಹೊಸ ಮೀಸಲಾತಿ ನಿಯಮದ ಅನ್ವಯ ನೇಮಕಾತಿ ಮತ್ತು ಶೈಕ್ಷಣಿಕ ಪ್ರವೇಶಾತಿ ನೀಡದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಮುಸ್ಲಿಂ ಸಮುದಾಯದ 4% ಮೀಸಲಾತಿ ರದ್ದು ಮಾಡಿದ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಸುದೀರ್ಘ ವಿಚಾರಣೆ ಇಂದು ನ್ಯಾ.ಕೆ.ಎಂ ಜೋಸೆಫ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ನಡೆಯಿತು.
ಅರ್ಜಿದಾರ ಗುಲಾಮ್ ರಸೂಲ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ದುಷ್ಯಂತ್ ದವೆ, ಮುಸ್ಲಿಂ ಮೀಸಲಾತಿ ರದ್ದು ಮಾಡಿ ಸರ್ಕಾರ ಈ ಮೀಸಲಾತಿಯನ್ನು ಇತರೆ ಜಾತಿಗಳಿಗೆ ನೀಡಿದೆ. ಈ ಮೂಲಕ ಸರ್ಕಾರ ಸುಪ್ರೀಂಕೋರ್ಟ್ ಹಿಂದಿನ ಆದೇಶಗಳನ್ನು ಉಲ್ಲಂಘಿಸಿದೆ. ಇದೊಂದು ಅಸಾಂವಿಧಾನಿಕ ನಿರ್ಧಾರವಾಗಿದೆ. ರಾತ್ರೋರಾತ್ರಿ ಚುನಾವಣೆ ಸಂದರ್ಭದಲ್ಲಿ ಈ ನಿರ್ಧಾರ ಕೈಗೊಳ್ಳುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದರು.
ಯಾವುದೇ ವರದಿಯನ್ನು ಪಡೆಯದೇ ಮೀಸಲಾತಿ ರದ್ದು ಮಾಡಿರುವುದು 1996ರ ಕಾಯ್ದೆಗೆ ವಿರುದ್ಧವಾಗಿದೆ. ಮುಸ್ಲಿಂ ಸಮುದಾಯವನ್ನು ಜನರಲ್ ಕೆಟಗರಿಗೆ ಸೇರ್ಪಡೆ ಮಾಡಿರುವುದು ಆಘಾತಕಾರಿ ಬೆಳವಣಿಗೆ ಎಂದು ವಾದ ಮಂಡಿಸಿದರು.
ತುಷಾರ್ ಮೆಹ್ತಾ ಅಫಿಡವಿಟ್ ಸಲ್ಲಿಕೆಗೆ ಮೂರು ದಿನಗಳ ಸಮಯ ಕೇಳಿದ ಹಿನ್ನಲೆಯಲ್ಲಿ ಕೋರ್ಟ್ ಮುಂದಿನ ವಿಚಾರಣೆಯನ್ನು ಏ.18ಕ್ಕೆ ಮುಂದೂಡಿತು.