Publish Date: Fri, 22 Oct 2021 (12:31 IST)
Updated Date: Fri, 22 Oct 2021 (06:34 IST)
ತಿರುವನಂತಪುರ : ಕೇರಳದಲ್ಲಿ ಗುರುವಾರ ಗುಡುಗು ಸಿಡಿಲಿನಿಂದ ಕೂಡಿದ ಭಾರಿ ಮಳೆಯಾಗಿದೆ. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಬಹುದು ಎಂಬ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಪತ್ತನಂತಿಟ್ಟ, ಕೋಟಯಂ, ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರ, ಕೋಯಿಕ್ಕೋಡ್, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರ, ಕೊಲ್ಲಂ, ಆಲಪ್ಪುಳ, ತ್ರಿಶ್ಶೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಎಂದರೆ ಭಾರಿ ಮಳೆ ಮತ್ತು ಯೆಲ್ಲೋ ಅಲರ್ಟ್ ಎಂದರೆ ಅಲ್ಲಲ್ಲಿ ಸಾಮಾನ್ಯ ಮಳೆ.
ಸಮುದ್ರದಲ್ಲಿ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇದೇ 15ರಿಂದ ರಾಜ್ಯದಲ್ಲಿ ಮಳೆ ಆರಂಭವಾಗಿದೆ. ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಸುರಿದಿದ್ದು ಅನಾಹುತಕ್ಕೆ ಕಾರಣವಾಗಿದೆ. ಮಳೆ ಸಂಬಂಧಿ ಅವಘಡಗಳಿಂದ ಈವರೆಗೆ 42 ಮಂದಿ ಮೃತಪಟ್ಟಿದ್ದಾರೆ.
ಶಾ ಸಮೀಕ್ಷೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಭಾರಿ ಮಳೆಯಿಂದ ತೀವ್ರ ತೊಂದರೆಗೆ ಒಳಗಾಗಿರುವ ಉತ್ತರಾಖಂಡ ರಾಜ್ಯದ ವಿವಿಧ ಭಾಗಗಳಲ್ಲಿ ಗುರುವಾರ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.