ನವದೆಹಲಿ:ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ರಾಮನಾಥ್ ಕೋವಿಂದ್ ಜೂನ್ 23 ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಜುಲೈ 17 ರಂದು ನಡೆಯುವ ರಾಷ್ಟ್ರಪತಿ ಚುನಾವಣೆಗೆ ಕೋವಿಂದ್ ಜೂನ್ 23ರಂದು ನಾಮಪತ್ರ ಸಲ್ಲಿಸಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಹಾಗೂ ಬಿಜೆಪಿ ಅಧಿಕಾರದಲ್ಲಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಈ ವೇಳೆ ಉಪಸ್ಥಿತರಿರಲಿದ್ದಾರೆ ಎನ್ನಲಾಗಿದೆ.
ಕೋವಿಂದ್ ನಾಮಪತ್ರ ಸಲ್ಲಿಕೆಗೆ ಬಿಜೆಪಿ 4 ಸೆಟ್ ಗಳೊಂದಿಗೆ ಸಂಪೂರ್ಣ ಸಿದ್ಧವಾಗಿದೆ. ಮೊದಲ ಸೆಟ್ ನಲ್ಲಿನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಜೊತೆಗೂಡಿ ಪ್ರಸ್ತಾಪಿಸಲಿದ್ದಾರೆ. ಎರಡನೇ ಸೆಟ್ ನಲ್ಲಿ ಅಮಿತ್ ಶಾ ಮತ್ತು ಅರುಣ್ ಜೈಟ್ಲಿ ಪ್ರಸ್ತಾಪಿಸಲಿದ್ದಾರೆ. 3ನೇ ಸೆಟ್ ನಲ್ಲಿ ಶಿರೋಮಣಿ ಅಕಾಲಿ ದಳದ ಪ್ರಕಾಶ್ ಸಿಂಗ್ ಬಾದಲ್ ಮತ್ತು ವೆಂಕಯ್ಯನಾಯ್ಡು ಪ್ರಸ್ತಾಪಿಸಲಿದ್ದಾರೆ. 4ನೇ ಸೆಟ್ ನಲ್ಲಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮತ್ತು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಪ್ರಸ್ತಾಪಿಸಲಿದ್ದಾರೆ ಎಂದು ತಿಳಿದುಬಂದಿದೆ.