ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯೋರ್ವಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲೆಂದು ಬಂದ ಸಂದರ್ಭದಲ್ಲಿ ಮತ್ತೆ ಅತ್ಯಾಚಾರಕ್ಕೊಳಗಾದ ಹೇಯ ಘಟನೆ ಜೆಮ್ಶೆಡ್ಪುರದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಳೆದೆರಡು ದಿನಗಳ ಹಿಂದೆ ಅಪ್ರಾಪ್ತನಿಂದಲೇ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿತ್ತು. ಆರೋಪಿಯನ್ನು ಬಂಧಿಸಿದ್ದ ಪೊಲೀಸರು ವಿಚಾರಣೆಗೊಳಪಡಿಸಿದ್ದರು.
ಆದರೆ ಘೋರ ಯಾತನೆಯಿಂದ ನರಳುತ್ತಿದ್ದ ಬಾಲಕಿಗೆ ಮತ್ತಿಷ್ಟು ಆಘಾತ ಕಾದಿದೆ ಎಂಬ ನಿರೀಕ್ಷೆ ಇರಲಿಕ್ಕಿಲ್ಲ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿಗೆ ಭಾನುವಾರ ರಾತ್ರಿ ಅದೇ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಮತ್ತೆ ಅತ್ಯಾಚಾರವೆಸಗಿದ್ದಾನೆ.
ಬಾಲಕಿ ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ನಾಪತ್ತೆಯಾಗಿರುವ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿರುವ ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಪೀಡಿತೆಗೆ ಸಾಂತ್ವನ ಹೇಳಿದ್ದಾರೆ.